ಶುಕ್ರವಾರ, ಮಾರ್ಚ್ 8, 2019

ತೆಲುಗು ಅಸ್ಮಿತೆ ರಾಜಕಾರಣದ ಟಿಡಿಪಿ

ಟಿಡಿಪಿ ಎಂದು ಹೆಚ್ಚು ಪ್ರಚಲಿತವಾಗಿರುವ ತೆಲುಗು ದೇಶಂ ಪಾರ್ಟಿ, ಸಂಸತ್ತಿನಲ್ಲಿ ಪ್ರತಿಪಕ್ಷ ಸ್ಥಾ ನ ನಿರ್ವಹಿಸಿದ ಮೊದಲ ಪ್ರಾದೇಶಿಕ ಪಕ್ಷ ಎಂಬ ಹೆಗ್ಗಳಿಕೆ ಹೊಂದಿದೆ. ಟಿಡಿಪಿ ಸದ್ಯ ಆಂಧ್ರದಲ್ಲಿ ಆಡಳಿತ ನಡೆಸುತ್ತಿದ್ದರೆ, ತೆಲಂಗಾಣದಲ್ಲಿ ತನ್ನ ಪ್ರಭಾವ ಹೊಂದಿದೆ. ತೆಲುಗು ಭಾಷೆಯ ಅಸ್ಮಿತೆಗಾಗಿ ತೆಲುಗು ದೇಶಂ ಪಾರ್ಟಿಯನ್ನು ಪ್ರಖ್ಯಾತ ನಟ ಎನ್‌.ಟಿ.ರಾಮರಾವ್‌ ಅವರು 1982ರ ಮಾರ್ಚ್‌ 29ರಂದು ಆರಂಭಿಸಿದರು. ಸದ್ಯ ಆಂಧ್ರದ ಮುಖ್ಯಮಂತ್ರಿ ಆಗಿರುವ ಚಂದ್ರಬಾಬು ನಾಯ್ಡು ಅವರು 1995ರಿಂದ ಟಿಡಿಪಿ ನೇತೃತ್ವ ವಹಿಸಿದ್ದಾರೆ. ಎನ್‌ಟಿಆರ್‌ ಅವರು ಜನಪ್ರಿಯ ಎಷ್ಟಿತ್ತೆಂದರೆ, ಟಿಡಿಪಿ ಆರಂಭಿಸಿದ 9 ತಿಂಗಳಲ್ಲೇ ಅವರು ಅಧಿಕಾರಕ್ಕೆ ಬಂದು, ಮೊದಲ ಬಾರಿಗೆ ಸಿಎಂ ಆದರು. 1984ರ ಚುನಾವಣೆಯಲ್ಲಿ ಕಾಂಗ್ರೆಸ್‌ ನಂತರ ಅತಿ ಹೆಚ್ಚು ಸ್ಥಾನ ಗೆದ್ದಿದ್ದರಿಂದ ಪ್ರತಿಪಕ್ಷ ವಾಗಿ ಟಿಡಿಪಿ ಕಾರ್ಯನಿರ್ವಹಿಸಿತು. ಎನ್‌ಟಿಆರ್‌ ಅವರು ತೆಲುಗು ಭಾಷೆ ಮತ್ತು ನಾಡು ಅಸ್ಮಿತೆಯಾಗಿ ಪಕ್ಷ ವನ್ನ ಆರಂಭಿಸಿದರು. ಎಲ್ಲಕ್ಕಿಂತ ಹೆಚ್ಚಾಗಿ ಅವರಿಗೆ ಕಾಂಗ್ರೆಸ್‌ಗೆ ಪರ್ಯಾಯವಾದ ಪಕ್ಷ ವನ್ನು ಹುಟ್ಟುಹಾಕಬೇಕಿತ್ತು. ಹಾಗಾಗಿ, ಟಡಿಪಿಯ ಸೈದ್ಧಾಂತಿಕ ವಿಚಾರಧಾರೆ ತೆಲುಗು ಅಸ್ಮಿತೆಯೇ ಆಗಿದೆ. ಇದರ ಜತೆಗೆ ರೈತರು, ಹಿಂದಿಳಿದವರು ಮತ್ತು ಮಧ್ಯಮ ವರ್ಗದ ಜನರ ಆಶೋತ್ತರಗಳನ್ನು ಈಡೇರಿಸುವುದಕ್ಕೂ ಬದ್ಧವಾಗಿದೆ. 1990ರ ನಂತರ ಟಿಡಿಪಿ ಉದಾರವಾದಕ್ಕೆ ಒತ್ತು ನೀಡಿದ್ದರಿಂದ, ಅದು ಈಗ ಉದ್ಯಮಿಗಳ ಪರ ಮತ್ತು ಅಭಿವೃದ್ಧಿ ಪರ ಎಂಬ ಟ್ಯಾಗ್‌ಲೈನ್‌ ಅಂಟಿಸಿಕೊಂಡಿದೆ. ಲೋಕಸಭೆಯಲ್ಲಿ 15, ರಾಜ್ಯಸಭೆಯಲ್ಲಿ 6 ತನ್ನ ಪ್ರತಿನಿಧಿಗಳನ್ನು ಹೊಂದಿದೆ. ಇನ್ನು ಆಂಧ್ರಪ್ರದೇಶದಲ್ಲಿ ಒಟ್ಟು 102 ಶಾಸಕರೊಂದಿಗೆ ಆಡಳಿತ ಚುಕ್ಕಾಣಿ ಹಿಡಿದಿದೆ. ಕೇಂದ್ರ ರಾಜಕಾರಣದಲ್ಲಿ ತನ್ನದೇ ಆದ ಪ್ರಭಾವ ಹೊಂದಿರುವ ಟಿಡಿಪಿ, ಈ ಹಿಂದೆ ಒಮ್ಮೆ ಯುಪಿಎ ಮತ್ತು ಎನ್‌ಡಿಎಗೆ ಬೆಂಬಲ ನೀಡಿತ್ತು. ಪ್ರಸಕ್ತ ಎನ್‌ಡಿಎ ಜತೆಗೆ ಗುರುತಿಸಿಕೊಂಡಿದ್ದ ನಾಯ್ಡು, ಆಂಧ್ರಕ್ಕೆ ವಿಶೇಷ ಪ್ಯಾಕೇಜ್‌ ನೀಡುತ್ತಿಲ್ಲ ಎಂದು ಆರೋಪಿಸಿ ಕೂಟದಿಂದ ಹೊರ ಬಂದಿದ್ದಾರೆ. ಪಕ್ಷ ದ ಸಂಸ್ಥಾಪಕರಾದ ಎನ್‌ಟಿಆರ್‌ ಅವರು ಒಟ್ಟು ಮೂರು ಬಾರಿ ಆಂಧ್ರ ಸಿಎಂ ಆಗಿದ್ದರು. ಚಂದ್ರಬಾಬು ನಾಯ್ಡು ಎರಡು ಬಾರಿ ಮುಖ್ಯಮಂತ್ರಿಯಾಗಿದ್ದಾರೆ.

ಕಾಮೆಂಟ್‌ಗಳಿಲ್ಲ: