party history ಲೇಬಲ್‌ನೊಂದಿಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತದೆ. ಎಲ್ಲಾ ಪೋಸ್ಟ್‌ಗಳನ್ನು ತೋರಿಸಿ
party history ಲೇಬಲ್‌ನೊಂದಿಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತದೆ. ಎಲ್ಲಾ ಪೋಸ್ಟ್‌ಗಳನ್ನು ತೋರಿಸಿ

ಶುಕ್ರವಾರ, ಮಾರ್ಚ್ 22, 2019

ಆಪ್‌, ಅಣ್ಣಾ ಚಳವಳಿಯ ಬಳುವಳಿ

2011ರಲ್ಲಿ ಅಣ್ಣಾ ಹಜಾರೆ ಅವರು ಜನ ಲೋಕಪಾಲ್‌ ಜಾರಿಗಾಗಿ ದಿಲ್ಲಿಯಲ್ಲಿ ಸತ್ಯಾಗ್ರಹ ಆರಂಭಿಸಿದ್ದರು. ಈ ವೇಳೆ ಮಾಧ್ಯಮಗಳಲ್ಲಿ ಅರವಿಂದ್‌ ಕೇಜ್ರಿವಾಲ್‌ ಎಂಬ ಹೆಸರು ಆಗಾಗ ಕೇಳಲಾರಂಭಿಸಿತು. ಜನ ಲೋಕಪಾಲ್‌ ರೂಪಿಸಿದ ಪ್ರಮುಖರ ಪೈಕಿ ಕೇಜ್ರಿವಾಲ್‌ ಕೂಡ ಒಬ್ಬರಾಗಿದ್ದು, ಸರಕಾರದ ಜತೆಗಿನ ಮಾತುಕತೆಯಲ್ಲಿ ಭಾಗಿಯಾಗುತ್ತಿದ್ದರು. ಭ್ರಷ್ಟಾಚಾರದ ವಿರುದ್ಧದ ಈ ಚಳವಳಿಗೆ ವ್ಯಾಪಕ ಬೆಂಬಲ ವ್ಯಕ್ತವಾಯಿತು. ಲೋಕಪಾಲ್‌ ಅನುಷ್ಠಾನಕ್ಕೆ ಚಳವಳಿಯೇ ಇರಲಿ ಎಂಬ ಅಣ್ಣಾ ನಿಲುವಿಗೆ ಭಿನ್ನ ಅಭಿಪ್ರಾಯ ಹೊಂದಿದ್ದ ಕೇಜ್ರಿವಾಲ್‌ ಹಾಗೂ ಮತ್ತಿತರು ರಾಜಕೀಯ ಭಾಗವಾಗಿ ಅದನ್ನು ಗುರಿ ಸಾಧಿಸಬೇಕೆಂಬ ವಾದವನ್ನು ಪ್ರತಿಪಾದಿಸಿದರು. ಅಂತಿಮವಾಗಿ 2012ರ ನವೆಂಬರ್‌ 26ರಂದು ಅರವಿಂದ್‌ ಕೇಜ್ರಿವಾಲ್‌ ಹಾಗೂ ಇತರರು ಸೇರಿ 'ಆಮ್‌ ಆದ್ಮಿ ಪಾರ್ಟಿ' ಹುಟ್ಟು ಹಾಕಿದರು. 
ಭಾರತೀಯ ರಾಜಕಾರಣದಲ್ಲಿ ಭಾರಿ ನಿರೀಕ್ಷೆ ಹುಟ್ಟು ಹಾಕಿದ್ದ ಆಪ್‌ ಕ್ರಮೇಣ ಅದು ಕೂಡ ಇತರ ಪಕ್ಷ ಗಳಂತಾಯಿತು. ಪಕ್ಷ ದ ಸ್ಥಾಪಕರ ಗುಂಪಿನಲ್ಲಿದ್ದ ಪ್ರಶಾಂತ್‌ ಭೂಷಣ್‌, ಯೋಗೇಂದ್ರ ಯಾದವ್‌ ಅವರನ್ನು ಪಕ್ಷ ದಿಂದ ಹೊರ ಹಾಕಲಾಯಿತು.
 2013ರಲ್ಲಿ ನಡೆದ ದಿಲ್ಲಿ ವಿಧಾನಸಭೆ ಚುನಾವಣೆಯಲ್ಲಿ ಆಪ್‌ 70 ಸ್ಥಾನಗಳ ಪೈಕಿ 28 ಸ್ಥಾನ ಗೆದ್ದುಕೊಂಡಿತು. ಯಾವುದೇ ಪಕ್ಷ ಕ್ಕೆ ಬಹುಮತ ಬಾರದ್ದರಿಂದ ಕಾಂಗ್ರೆಸ್‌ನ ಷರತ್ತುಬದ್ಧ ಬೆಂಬಲದೊಂದಿಗೆ ದಿಲ್ಲಿಯಲ್ಲಿ ಸರಕಾರ ರಚಿಸಿತು. ಅರವಿಂದ್‌ ಕೇಜ್ರಿವಾಲ್‌ ಸಿಎಂ ಆದರು. ಆದರೆ, ಜನ ಲೋಕಪಾಲ್‌ ವಿಧೇಯಕ ಜಾರಿಗೆ ಇತರ ಪಕ್ಷ ಗಳಿಂದ ಬೆಂಬಲ ದೊರೆಯದ್ದರಿಂದ ಕೇವಲ 49 ದಿನಗಳಲ್ಲೇ ಸರಕಾರ ಪತನವಾಯಿತು. 2015ರ ದಿಲ್ಲಿ ವಿಧಾನಸಭೆ ಚುನಾವಣೆಯಲ್ಲಿ ಯಾರೂ ನಿರೀಕ್ಷಿಸದ ರೀತಿಯಲ್ಲಿ ಆಪ್‌ ಭಾರೀ ಜಯ ಸಾಧಿಸಿತು. 70 ಕ್ಷೇತ್ರಗಳ ಪೈಕಿ 67 ಕ್ಷೇತ್ರಗಳಲ್ಲಿ ದಿಗ್ವಿಜಯ ಸಾಧಿಸಿತು. ಕೇಜ್ರಿವಾಲ್‌ ಮತ್ತೆ ಮುಖ್ಯಮಂತ್ರಿಯಾದರು. ಕಾಂಗ್ರೆಸ್‌ ಶೂನ್ಯ ಸಾಧನೆ ಮಾಡಿದರೆ, ಬಿಜೆಪಿ ಗೆದ್ದಿದ್ದು ಕೇವಲ ಮೂರು ಕ್ಷೇತ್ರ. ದಿಲ್ಲಿ ಗೆಲುವು ಆಪ್‌ಗೆ ಹುಮ್ಮಸ್ಸು ತಂದಿದ್ದರಿಂದ ಪಂಜಾಬ್‌, ಹರಿಯಾಣ, ಗೋವಾ ಸೇರಿದಂತೆ ಹಲವು ರಾಜ್ಯಗಳಲ್ಲಿ ಪಕ್ಷ ದ ನೆಲೆ ಭದ್ರಪಡಿಸಿಕೊಳ್ಳಲು ಸಾಧ್ಯವಾಯಿತು. 2014ರ ಸಾರ್ವತ್ರಿಕ ಚುನಾವಣೆಯಲ್ಲಿ ವಾರಾಣಸಿ ಕ್ಷೇತ್ರದಲ್ಲಿ ಮೋದಿ ವಿರುದ್ಧ ಕೇಜ್ರಿವಾಲ್‌ ಸ್ಪರ್ಧಿಸಿ ಸೋತರು. ಈ ಚುನಾವಣೆಯಲ್ಲಿ ಆಪ್‌ ದೇಶಾದ್ಯಂತ ಒಟ್ಟು 434 ಸ್ಥಾನಗಳಲ್ಲಿ ಸ್ಪರ್ಧಿಸಿ, ನಾಲ್ಕು ಕ್ಷೇತ್ರಗಳಲ್ಲಿ ಗೆಲುವು ಕಂಡಿತು. ಭಾರತೀಯ ರಾಜಕಾರಣದಲ್ಲಿ ಭಾರಿ ನಿರೀಕ್ಷೆ ಹುಟ್ಟು ಹಾಕಿದ್ದ ಆಪ್‌ ಕ್ರಮೇಣ ಅದು ಕೂಡ ಇತರ ಪಕ್ಷ ಗಳಂತಾಯಿತು. ಪಕ್ಷ ದ ಸ್ಥಾಪಕರ ಗುಂಪಿನಲ್ಲಿದ್ದ ಪ್ರಶಾಂತ್‌ ಭೂಷಣ್‌, ಯೋಗೇಂದ್ರ ಯಾದವ್‌ ಅವರನ್ನು ಪಕ್ಷ ದಿಂದ ಹೊರ ಹಾಕಲಾಯಿತು. ಭ್ರಷ್ಟಾಚಾರ ವಿರೋಧಿ ನೀತಿ, ಸಮಾನತೆ ಮತ್ತು ಪ್ರಜಾಸತ್ತಾತ್ಮಕ ಸಮಜಾವಾದಿ ಪಕ್ಷ ದ ಧ್ಯೇಯಗಳಾಗಿವೆ. ಪೊರಕೆ ಪಕ್ಷ ದ ಚಿಹ್ನೆ. 

ಗುರುವಾರ, ಮಾರ್ಚ್ 21, 2019

ಗೆಲ್ಲುವ ಕೂಟ ಅರಸುವ ಎಲ್‌ಜೆಪಿ

2017ರಲ್ಲಿ ಮಹಾಮೈತ್ರಿ ಮುರಿದು ಬಿತ್ತು. ಆಗ ಮತ್ತೆ ನಿತೀಶ್‌ ಕುಮಾರ್‌ ಬಿಜೆಪಿ ಜತೆ ಸಖ್ಯ ಬೆಳೆಸಿ ಸಿಎಂ ಆದರು. ಎನ್‌ಡಿಎ ಭಾಗವಾಗಿದ್ದ ಎಲ್‌ಜೆಪಿ ಕೂಡ ಸರಕಾರದಲ್ಲಿ ಪಾಲುದಾರ ಪಕ್ಷ ವಾಯಿತು. ದಲಿತೋದ್ಧಾರ ಧ್ಯೇಯವನ್ನು ಹೊಂದಿರುವ ಎಲ್‌ಜೆಪಿ ಜಾತ್ಯತೀತ, ಸಮಾಜವಾದಿ ಸಿದ್ಧಾಂತವನ್ನು ಅಳವಡಿಸಿಕೊಂಡಿದೆ. 


ಗೆಲ್ಲುವ ಕೂಟಗಳನ್ನು ಆಯ್ಕೆ ಮಾಡಿಕೊಳ್ಳುವ ರಾಮ್‌ ವಿಲಾಸ್‌ ಪಾಸ್ವಾನ್‌ ನೇತೃತ್ವದ ಲೋಕ ಜನಸಕ್ತಿ ಪಾರ್ಟಿ(ಎಲ್‌ಜೆಪಿ) ಬಿಹಾರದಲ್ಲಿ ಸಕ್ರಿಯವಾಗಿದೆ. 2000ರಲ್ಲಿ ಪಾಸ್ವಾನ್‌ ಅವರು ಲೋಕ ಜನಶಕ್ತಿ ಪಾರ್ಟಿಯನ್ನು ಸ್ಥಾಪಿಸಿದರು. 1969ರಲ್ಲಿ ಸಂಯುಕ್ತ ಸೋಷಿಯಲಿಷ್ಟ್‌ ಪಾರ್ಟಿಯಿಂದ ರಾಜಕೀಯ ಜೀವನ ಆರಂಭಿಸಿದ್ದ ಪಾಸ್ವಾನ್‌, ಎಲ್‌ಜೆಪಿ ಸ್ಥಾಪಿಸುವ ಮುನ್ನ ಜನತಾ ದಳದಲ್ಲಿದ್ದರು. 2004ರ ಚುನಾವಣೆಯಲ್ಲಿ ಯುಪಿಎ ಜತೆ ಮೈತ್ರಿಮಾಡಿಕೊಂಡಿದ್ದ ಅವರು ನಾಲ್ಕು ಲೋಕಸಭಾ ಕ್ಷೇತ್ರಗಳನ್ನು ಗೆದ್ದುಕೊಂಡು, ಕೇಂದ್ರದಲ್ಲಿ ಸಚಿವರಾದರು. 2005ರ ಫೆಬ್ರವರಿಯಲ್ಲಿ ನಡೆದ ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಜತೆಗೂಡಿ ಸ್ಪರ್ಧಿಸಿ, 29 ಸೀಟುಗಳನ್ನು ಎಲ್‌ಜೆಪಿ ಗೆದ್ದುಕೊಂಡಿತು. ಆದರೆ, ಯಾವುದೇ ಪಕ್ಷ ಕ್ಕೆ ಬಹುಮತ ಬಾರದ್ದರಿಂದ ಸರಕಾರ ರಚನೆಯಾಗಲಿಲ್ಲ. ಕೆಲವು ದಿನಗಳವರೆಗೆ ಬಿಹಾರದಲ್ಲಿ ರಾಷ್ಟ್ರಪತಿ ಆಡಳಿತ ಹೇರಲಾಯಿತು. ಮತ್ತೆ ಅಕ್ಟೋಬರ್‌ನಲ್ಲಿ ನಡೆದ ಚುನಾವಣೆಯಲ್ಲಿ ಜೆಡಿಯು ನೇತೃತ್ವದ ಎನ್‌ಡಿಎ ಭಾರಿ ಬಹುಮತದೊಂದಿಗೆ ಅಧಿಕಾರಕ್ಕೆ ಬಂತು. 
ಎಲ್‌ಜೆಪಿ 203 ಕ್ಷೇತ್ರಗಳಲ್ಲಿ ಸ್ಪರ್ಧಿಸಿತ್ತಾದರೂ ಗೆದ್ದಿದ್ದು ಕೇವಲ 10 ಸ್ಥಾನಗಳು ಮಾತ್ರ. 2009ರ ಸಾರ್ವತ್ರಿಕ ಚುನಾವಣೆಯಲ್ಲಿ ಎಲ್‌ಜಿಪಿ 'ನಾಲ್ಕನೇ ರಂಗ'ದ ಭಾಗವಾಗಿತ್ತು. ಎಸ್‌ಪಿ, ಆರ್‌ಜೆಡಿ ಕೂಡ ಇದರಲ್ಲಿದ್ದವು. ಈ ಪ್ರಯೋಗ ಯಶಸ್ವಿಯಾಗಲಿಲ್ಲ. ಎಲ್‌ಜೆಪಿಗೆ ಒಂದೂ ಸ್ಥಾನ ಬರಲಿಲ್ಲ. ಚುನಾವಣೆ ಬಳಿಕ ಆರ್‌ಜೆಡಿ ಬೇಷರತ್ತಾಗಿ ಯುಪಿಎಗೆ ಬೆಂಬಲ ನೀಡಿತು. 2010ರಲ್ಲಿ ಬಿಹಾರ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಆರ್‌ಜೆಡಿ ಜತೆಗೂಡಿ ಎಲ್‌ಜೆಪಿ ಚುನಾವಣೆ ಸ್ಪರ್ದಿಸಿತಾದರೂ ಗೆದ್ದಿದ್ದು ಕೇವಲ ಮೂರು ಸ್ಥಾನಗಳು ಮಾತ್ರ. ಬೇರೆ ಬೇರೆ ಪಕ್ಷ ಗಳ ಜತೆ ರಾಜಕಾರಣ ಮಾಡಿದ್ದ ಎಲ್‌ಜೆಪಿ ಮತ್ತು 2014ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭಾಗವಾಯಿತು. ಏಳು ಕ್ಷೇತ್ರಗಳಲ್ಲಿ ಸ್ಪರ್ಧಿಸಿ 6 ಕ್ಷೇತ್ರಗಳಲ್ಲಿ ಜಯ ಸಾಧಿಸಿತು. ಕೇಂದ್ರದಲ್ಲಿ ಪಾಸ್ವಾನ್‌ ಮಂತ್ರಿಯಾದರು. 2015ರ ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಎನ್‌ಡಿಎ ಭಾಗವಾಗಿ 40 ಸ್ಥಾನಗಳಲ್ಲಿ ಸ್ಪರ್ಧಿಸಿ, ಕೇವಲ 2 ಕ್ಷೇತ್ರದಲ್ಲಿ ಜಯ ಸಾಧಿಸಿತು. ಆರ್‌ಜೆಡಿ-ಕಾಂಗ್ರೆಸ್‌-ಜೆಡಿಯು ಮಹಾಮೈತ್ರಿ ಈ ಚುನಾವಣೆಯಲ್ಲಿ ಬಹುಮತ ಪಡೆದು ಸರಕಾರ ರಚಿಸಿತು. 2017ರಲ್ಲಿ ಮಹಾಮೈತ್ರಿ ಮುರಿದು ಬಿತ್ತು. ಆಗ ಮತ್ತೆ ನಿತೀಶ್‌ ಕುಮಾರ್‌ ಬಿಜೆಪಿ ಜತೆ ಸಖ್ಯ ಬೆಳೆಸಿ ಸಿಎಂ ಆದರು. ಎನ್‌ಡಿಎ ಭಾಗವಾಗಿದ್ದ ಎಲ್‌ಜೆಪಿ ಕೂಡ ಸರಕಾರದಲ್ಲಿ ಪಾಲುದಾರ ಪಕ್ಷ ವಾಯಿತು. ದಲಿತೋದ್ಧಾರ ಧ್ಯೇಯವನ್ನು ಹೊಂದಿರುವ ಎಲ್‌ಜೆಪಿ ಜಾತ್ಯತೀತ, ಸಮಾಜವಾದಿ ಸಿದ್ಧಾಂತವನ್ನು ಅಳವಡಿಸಿಕೊಂಡಿದೆ. 

ಶನಿವಾರ, ಮಾರ್ಚ್ 16, 2019

2014ರಲ್ಲಿ ಬಿಜೆಪಿಗೆ ಭರ್ಜರಿ ಜಯ, ಕಾಂಗ್ರೆಸ್‌ಗೆ ಹೀನಾಯ ಸೋಲು

ಯುಪಿಎ-2 ಅವಧಿಯಲ್ಲಿ ಕಾಂಗ್ರೆಸ್‌ನ ಸ್ವಯಂಕೃತ ಅಪರಾಧಗಳು, ಹಗರಣಗಳೇ 2014ರ ಸಾರ್ವತ್ರಿಕ ಚುನಾವಣೆಯಲ್ಲಿ ಆ ಪಕ್ಷ ದ ಹೀನಾಯ ಸೋಲಿಗೆ ಕಾರಣವಾಯಿತು. 2004-2009ರ ಅವಧಿಯಲ್ಲಿ ಯುಪಿಎ ಬಗ್ಗೆ ಜನರು ಹೊಂದಿದ್ದ ಸಾವಧಾನ ಭಾವ 2014ರ ಚುನಾವಣೆ ಹೊತ್ತಿಗೆ ಆಕ್ರೋಶವಾಗಿ ಪರಿಣಮಿಸಿತು. ಪ್ರಧಾನಿ ಡಾ.ಮನಮೋಹನ್‌ ಸಿಂಗ್‌ ಮತ್ತು ಅವರ ಸಂಪುಟದ ಅನೇಕ ಸಚಿವರ ವಿರುದ್ಧವೇ ಕಲ್ಲಿದ್ದಲು, 2ಜಿ ಸ್ಪೆಕ್ಟ್ರಮ್‌, ಕಾಮನ್ವೆಲ್ತ್‌, ಆದರ್ಶ ಹೌಸಿಂಗ್‌, ಆಗಸ್ಟಾವೆಸ್ಟಲ್ಯಾಂಡ್‌ ಸೇರಿದಂತೆ ಇನ್ನಿತರ ಹಗರಣಗಳು ಕೇಳಿ ಬಂದವು. ದೇಶದಲ್ಲಿ ಎಷ್ಟೆಲ್ಲ ಭ್ರಷ್ಟಾಚಾರ ನಡೆಯುತ್ತಿದ್ದರೂ ಪ್ರಧಾನಿ ಸಿಂಗ್‌ ಯಾವುದಕ್ಕೂ ಪ್ರತಿಕ್ರಿಯೆ ನೀಡುತ್ತಿರಲಿಲ್ಲ ಎಂಬ ಆರೋಪ ಸಾಮಾನ್ಯವಾಗಿತ್ತು. 
ಮತ್ತೊಂದೆಡೆ, ಬಿಜೆಪಿಯು ನರೇಂದ್ರ ಮೋದಿ ಅವರನ್ನು ತಮ್ಮ ಸದೃಢ ನಾಯಕರನ್ನಾಗಿ ಬಿಂಬಿಸಿತಲ್ಲದೇ, ದೇಶವನ್ನು ಮುನ್ನಡೆಸಲು ಇವರೇ ಸೂಕ್ತರು ಎಂದು ಪ್ರಚಾರ ಮಾಡಿತು. ಈ ಅವಧಿಯಲ್ಲಾದ ಒಟ್ಟು ಬೆಳವಣಿಗೆಗಳು ಕಾಂಗ್ರೆಸ್‌ ಹಾಗೂ ಅದರ ಮಿತ್ರ ಪಕ್ಷ ಗಳ ವಿರುದ್ಧ ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾದವು. 2014ರ ಚುನಾವಣೆಯಲ್ಲಿ ಕಾಂಗ್ರೆಸ್‌ ನೇತೃತ್ವದ ಯುಪಿಎ ಖಂಡಿತ ಸೋಲುತ್ತದೆ ಎಂದು ಎಲ್ಲರೂ ಉಹಿಸಿದ್ದರು. ಆದರೆ, ತೀರಾ ಡಬಲ್‌ ಡಿಜಿಟ್‌ಗೆ ಕುಸಿಯುತ್ತದೆ ಎಂದು ಯಾರೂ ಭಾವಿಸಿರಲಿಲ್ಲ. ಅಂತಿಮವಾಗಿ ಫಲಿತಾಂಶ ಹೊರ ಬಿದ್ದಾಗ ಕಾಂಗ್ರೆಸ್‌ 44 ಸ್ಥಾನಗಳನ್ನು ಪಡೆದ ಹೀನಾಯ ಸೋಲು ಕಂಡಿತು. ಮತ್ತೊಂದೆಡೆ ಬಿಜೆಪಿ ಏಕಾಂಗಿಯೇ 282 ಸ್ಥಾನಗಳನ್ನು ಗೆಲ್ಲುವ ಮೂಲಕ ಅಭೂತಪೂರ್ವ ಜಯ ಸಾಧಿಸಿತು. ಕಪ್ಪು ಹಣದ ವಿರುದ್ಧ ಸಮರ ಸಾರುವ ಭರವಸೆ ನೀಡಿದ್ದ ಮೋದಿ ಅವರು ಪ್ರಧಾನಿಯಾದರು. ವಾಜಪೇಯಿ ಬಳಿಕ ಪ್ರಧಾನಿಯಾದ ಬಿಜೆಪಿ ನಾಯಕ ಎಂಬ ಹೆಗ್ಗಳಿಕೆ ಅವರದ್ದಾಯಿತು. ಈ ಚುನಾವಣೆಯಲ್ಲಿ ಎನ್‌ಡಿಎ ಒಟ್ಟು 336 ಸ್ಥಾನಗಳನ್ನು ಗೆದ್ದರೆ, ಯುಪಿಎ ಗೆದ್ದಿದ್ದು ಕೇವಲ 60 ಸ್ಥಾನ ಮಾತ್ರ. ಅಧಿಕೃತ ಪ್ರತಿಪಕ್ಷ ನಾಯಕ ಇರಲಿಲ್ಲ ಎಂಬುದು 16ನೇ ಲೋಕಸಭೆಯ ವಿಶೇಷ. ಅಧಿಕೃತ ಪ್ರತಿಪಕ್ಷ ವಾಗಬೇಕಿದ್ದರೆ 545 ಸ್ಥಾನಗಳ ಪೈಕಿ ಕನಿಷ್ಠ 55 ಸ್ಥಾನಗಳನ್ನು ಗೆಲ್ಲಬೇಕು. ಆದರೆ, ಯಾವ ಪಕ್ಷ ಕ್ಕೂ ಅಷ್ಟು ಸ್ಥಾನಗಳನ್ನು ಗೆಲ್ಲಲಿಲ್ಲ. ಕರ್ನಾಟಕದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಕಾಂಗ್ರೆಸ್‌ ಲೋಕಸಭೆಯಲ್ಲಿ ತನ್ನ ನಾಯಕನನ್ನಾಗಿ ಆಯ್ಕೆ ಮಾಡಿತು. ಈಗ ಮತ್ತೆ ಬಿಜೆಪಿ, ಕಾಂಗ್ರೆಸ್‌ 2019ರ ಚುನಾವಣೆಗೆ ಸಜ್ಜಾಗಿವೆ. 
- ತಿಪ್ಪಾರ

ಈ ಲೇಖನವು ವಿಜಯ ಕರ್ನಾಟಕದಲ್ಲಿ ಪ್ರಕಟವಾಗಿದೆ.

ನೆಹರು ಸಮಾಜವಾದಿ ನೀತಿ ವಿರೋಧಿಸಿ ಸ್ವತಂತ್ರ ಪಾರ್ಟಿ ಕಟ್ಟಿದ ಸಿ.ರಾಜಗೋಪಾಲಾಚಾರಿ

ಒಂದು ಕಾಲದಲ್ಲಿ ಸ್ವತಂತ್ರ ಪಾರ್ಟಿಭಾರತೀಯ ರಾಜಕಾರಣದಲ್ಲಿ ಭಾರಿ ಸದ್ದು ಮಾಡಿದ ಪಕ್ಷ ವಾಗಿತ್ತು. 1959ರಿಂದ 1974ರವರೆಗೆ ಸಕ್ರಿಯವಾಗಿದ್ದ ಈ ಪಕ್ಷ ವನ್ನು ಮುನ್ನಡೆಸಿದ್ದು ಸಿ. ರಾಜಗೋಪಾಲಾಚಾರಿ ಅವರು. ಅಂದಿನ ಪ್ರಧಾನಿ ನೆಹರು ಅವರ ಸಮಾಜವಾದಿ ಧೋರಣೆ ವಿರೋಧಿಸಿ ರಾಜಗೋಪಾಲಾಚಾರಿ ಅವರು ಪಕ್ಷ ವನ್ನು ಸ್ಥಾಪಿಸಿದರು. ಪಕ್ಷ ದ ಸೈದ್ಧಾಂತಿಕ ನೆಲೆ ಸಂಪ್ರದಾಯವಾದವಾದರೂ ಅದರ ಸ್ವರೂಪದಲ್ಲಿ ಉದಾರವಾದವೂ ಇತ್ತು. ಪಕ್ಷ ಪ್ರಮುಖ ನಾಯಕರೆಲ್ಲರೂ ಈ ಹಿಂದೆ ಕಾಂಗ್ರೆಸ್‌ನಲ್ಲಿದ್ದವರೇ. ಟಿ.ಪಿ. ಪಂತಲು, ಮಿನೋ ಮಸಾನಿ, ಎನ್‌.ಜಿ.ರಂಗಾ ಮತ್ತು ಕೆ.ಎಂ. ಮುನ್ಶಿ ಆ ಪೈಕಿ ಪ್ರಮುಖರು. 
ವ್ಯಾಪಾರಿಗಳು ಮತ್ತು ಕೈಗಾರಿಕೋದ್ಯಮಿಗಳ ಪರ ಇದ್ದ ಈ ಪಕ್ಷ ದ ನಾಯಕತ್ವ ಮಾತ್ರ ಸಾಂಪ್ರದಾಯಿಕ ಮುಂದುವರಿದ ವರ್ಗದವರ ಕೈಯಲ್ಲೇ ಇತ್ತು. ಅಂದರೆ ಜಮೀನ್ದಾರು ಮತ್ತು ಈ ಹಿಂದೆ ರಾಜರಾಗಿದ್ದವರು. ಪ್ರಧಾನಿ ನೆಹರು ಕೂಡ ಈ ಪಕ್ಷ ವನ್ನು ಹಿಗ್ಗಾಮುಗ್ಗಾ ಟೀಕಿಸುತ್ತಿದ್ದರು, ''ಮಧ್ಯ ವಯಸ್ಸಿನ ನಾಯಕರ ಭೂ ಒಡೆಯರ ಪಕ್ಷ '' ಎಂದು ಹೇಳುತ್ತಿದ್ದರು. ಸ್ವತಂತ್ರ ಪಾರ್ಟಿ ಅಸ್ತಿತ್ವಕ್ಕೆ ಬಂದ ಬಳಿಕ ಅದು 1962ರ ಸಾರ್ವತ್ರಿಕ ಚುನಾವಣೆಯನ್ನು ಎದುರಿಸಿತು. ತಾನು ಎದುರಿಸಿದ ಮೊದಲ ಚುನಾವಣೆಯಲ್ಲಿ ಶೇ.6.8ರಷ್ಟು ಮತ ಗಳಿಸಿ, ಒಟ್ಟು 18 ಸ್ಥಾನ ಗೆದ್ದುಕೊಂಡಿತು. ಅಲ್ಲದೆ, ಬಿಹಾರ, ರಾಜಸ್ಥಾನ, ಗುಜರಾತ್‌ ಮತ್ತು ಒಡಿಶಾ ವಿಧಾನಸಭೆಗಳಲ್ಲಿ ಪ್ರಮುಖ ವಿರೋಧ ಪಕ್ಷ ವಾಯಿತು. 1967ರ ಚುನಾವಣೆ ಹೊತ್ತಿಗೆ ಸ್ವತಂತ್ರ ಪಕ್ಷ ವು ದೇಶದ ಕೆಲವು ಭಾಗಗಳಲ್ಲಿ ಭಾರಿ ಪ್ರಭಾವ ಹೊಂದಿತ್ತು. ಈ ಚುನಾವಣೆಯಲ್ಲಿ ಶೇ.8.7ರಷ್ಟು ಮತ ಪಡೆದು ನಾಲ್ಕನೇ ಲೋಕಸಭೆ(1967-71)ಯಲ್ಲಿ ಪ್ರತಿಪಕ್ಷ ವಾಗಿ ಗುರುತಿಸಿಕೊಂಡಿತು. ಒಟ್ಟು 44 ಸ್ಥಾನಗಳನ್ನು ಅದು ಗೆದ್ದುಕೊಂಡಿತ್ತು. ಇಂದಿರಾ ಗಾಂಧಿ ಅವರನ್ನು ಸೋಲಿಸುವ ನಿಟ್ಟಿನಲ್ಲಿ ಸ್ವತಂತ್ರ ಪಕ್ಷ ಕೂಡ ಜನತಾ ಪಾರ್ಟಿಯ ಭಾಗವಾಯಿತು. 1971ರಲ್ಲಿ ಶೇ.3ರಷ್ಟು ಮತ ಪಡೆದು 8 ಕ್ಷೇತ್ರಗಳನ್ನು ಗೆದ್ದುಕೊಳ್ಳಲು ಯಶಸ್ವಿಯಾಯಿತು. 1974ರಲ್ಲಿ ರಾಜಗೋಪಾಲಚಾರಿ ನಿಧನ ಬಳಿಕ ಪಕ್ಷ ವನ್ನು ಚರಣ್‌ ಸಿಂಗ್‌ ನೇತೃತ್ವದ ಭಾರತೀಯ ಲೋಕದಳ ಪಕ್ಷ ದ ಜತೆ ವಿಲೀನ ಮಾಡಲಾಯಿತು. ಸ್ವತಂತ್ರ ಪಾರ್ಟಿಯ ಸ್ಥಾಪನೆಯ ಉದ್ದೇಶವೇ ಕಾಂಗ್ರೆಸ್‌ ನೀತಿ ವಿರೋಧಿಯಾದ್ದರಿಂದ, ಅವಕಾಶ ಸಿಕ್ಕಾಗಲೆಲ್ಲ ಅದು ಕಾಂಗ್ರೆಸ್‌ ವಿರೋಧಿ ಪಕ್ಷ ಗಳ ಜತೆಗೂಡಿದರು.


ಈ ಲೇಖನವು ವಿಜಯ ಕರ್ನಾಟಕದಲ್ಲಿ ಪ್ರಕಟಗೊಂಡಿದೆ.

ಶುಕ್ರವಾರ, ಮಾರ್ಚ್ 15, 2019

AGP- ಅಸ್ಸಾಮ್ ಗಣ ಪರಿಷತ್- ವಿದ್ಯಾರ್ಥಿ ಚಳವಳಿಯಿಂದ ವಿಧಾನಸಭೆವರೆಗೆ...

ಸ್ವತಂತ್ರ ಭಾರತದಲ್ಲಿ ಅನೇಕ ಚಳವಳಿಗಳು ನಡೆದಿವೆ. ಆ ಪೈಕಿ ಕೆಲವು ಚಳವಳಿಗಳು ಕ್ರಮೇಣ ರಾಜಕೀಯ ಪಕ್ಷ ಗಳಾಗಿ ಬದಲಾಗಿವೆ. ಇದಕ್ಕೆ ಅತ್ಯುತ್ತಮ ಉದಾಹರಣೆ ಎಂದರೆ, ಅಸ್ಸಾಮ್‌ ಗಣ ಪರಿಷತ್‌. ಈಶಾನ್ಯ ಭಾರತದ ಪ್ರಮುಖ ರಾಜ್ಯವಾಗಿರುವ ಅಸ್ಸಾಮ್‌ನಲ್ಲಿ ರಾಜಕಾರಣ ಇತರ ರಾಜ್ಯಗಳಂತಲ್ಲ. ನೆರೆಯ ರಾಷ್ಟ್ರ ಬಾಂಗ್ಲಾದೇಶದಿಂದ ಅಕ್ರಮ ವಲಸಿಗರು ನಿರಂತರವಾಗಿ ಈ ರಾಜ್ಯದಲ್ಲಿ ನುಸುಳುತ್ತಾರೆ. ಬಹುತೇಕ ಎಲ್ಲ ಚುನಾವಣೆಗಳಲ್ಲಿ ಅಕ್ರಮ ಬಾಂಗ್ಲಾ ವಲಸಿಗರನ್ನು ತಡೆಯುವ ನೀತಿಯ ಚುನಾವಣಾ ವಿಷಯವಸ್ತುವಾಗಿರುತ್ತದೆ. ಎಜಿಪಿಯ ಪೂರ್ವಾಶ್ರಮವಾದ ಆಲ್‌ ಅಸ್ಸಾಮ್‌ ಸ್ಟುಡೆಂಟ್‌ ಯೂನಿಯನ್‌(ಎಎಎಸ್‌ಯು) 1970ರ ದಶಕದಲ್ಲಿ ಅಕ್ರಮ ಬಾಂಗ್ಲಾದೇಶಿಗರ ವಿರುದ್ಧ ಚಳವಳಿ ಆರಂಭಿಸಿತು. ವಿದ್ಯಾರ್ಥಿ ಸಂಘದ ಈ ಪ್ರಯತ್ನಕ್ಕೆ ಅಸ್ಸಾಮ್‌ನ ಇತರ ಸಂಘ ಸಂಸ್ಥೆಗಳಿಂದಲೂ ಅಪೂರ್ವ ಬೆಂಬಲ ವ್ಯಕ್ತವಾಯಿತು. ಚಳವಳಿ ತೀವ್ರ ಸ್ವರೂಪ ಪಡೆಯುತಿತದ್ದಂತೆ ಅಂದಿನ ಪ್ರಧಾನಿ ರಾಜೀವ್‌ ಗಾಂಧಿ ಅವರು ಅಸ್ಸಾಮ್‌ ಒಪ್ಪಂದ ಏರ್ಪಡುವುದಕ್ಕೆ ಕಾರಣವಾದರು. ಅಂದರೆ, 1985 ಆಗಸ್ಟ್‌ 15ರಂದು ಕೇಂದ್ರ ಸರಕಾರ ಮತ್ತು ಎಎಎಸ್‌ಯು ಮಧ್ಯೆ ಒಪ್ಪಂದವಾಯಿತು. ಮುಂದೆ ಇದೇ ವರ್ಷದ ಅಕ್ಟೋಬರ್‌ನ 13ರಿಂದ 14ವರೆಗೆ ತಿಂಗಳಲ್ಲಿ ನಡೆದ ಗೋಲಾಘಾಟ್‌ ಸಮಾವೇಶದಲ್ಲಿ ವಿದ್ಯಾರ್ಥಿ ಸಂಘವನ್ನು ವಿಸರ್ಜಿ ಅಸ್ಸಾಮ್‌ ಗಣ ಪರಿಷತ್‌ ಎಂಬ ರಾಜಕೀಯ ಪಕ್ಷ ವನ್ನು ಆರಂಭಿಸಲಾಯಿತು. ಪ್ರಫುಲ್‌ ಕುಮಾರ್‌ ಮಹಾಂತ ಅವರು ಪಕ್ಷ ದ ಅಧ್ಯಕ್ಷ ರಾಗಿ ಆಯ್ಕೆಯಾದರು. 1985ರಲ್ಲಿ ನಡೆದ ಅಸ್ಸಾಮ್‌ ವಿಧಾನಸಭೆ ಚುನಾವಣೆಯಲ್ಲಿ ಈ ಹೊಸ ಪಕ್ಷ ಸ್ಪರ್ಧಿಸಿತಲ್ಲದೇ, 126 ಸ್ಥಾನಗಳ ಪೈಕಿ 66 ಸ್ಥಾನಗಳನ್ನು ಗೆದ್ದುಕೊಂಡು ಸರಕಾರ ರಚಿಸಿತು. ಮುಂದೆ 1996ರಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲೂ ಗೆಲುವು ಸಾಧಿಸಿತು. ಪಕ್ಷ ದ ನಾಯಕ ಪ್ರಫುಲ್‌ ಕುಮಾರ್‌ ಮಹಾಂತ ಅವರು 1985ರಿಂದ 1990 ಮತ್ತು 1996ರಿಂದ 2001ರಲ್ಲಿ ಎರಡು ಅವಧಿಗೆ ಮುಖ್ಯಮಂತ್ರಿಯಾದರು. ಜತೆಗೆ, ಅತ್ಯಂತ ಕಿರಿಯ ವಯಸ್ಸಿನಲ್ಲಿ ಮುಖ್ಯಮಂತ್ರಿಯಾದ ಎಂಬ ಹೆಗ್ಗಳಿಕೆ ಮಹಾಂತ ಅವರಿಗಿದೆ. ಎರಡ್ಮೂರು ಬಾರಿ ಈ ಪಕ್ಷ ಒಡೆದು ಹೋಳಾಗಿದೆ. ಅಸ್ಸಾಮ್‌ನ ಹಾಲಿ ಮುಖ್ಯಮಂತ್ರಿ ಸರ್ಬಾನಂದ್‌ ಸೋನವಾಲಾ ಅವರು ಅಸ್ಸಾಮ್‌ ಗಣ ಪರಿಷತ್‌ನ ಫೈರ್‌ ಬ್ರಾಂಡ್‌ ನಾಯಕ. ಆದರೆ, ಭಿನ್ನಾಭಿಪ್ರಾಯದಿಂದಾಗಿ ಅವರು 2011ರಲ್ಲಿ ಬಿಜೆಪಿ ಸೇರಿದ್ದರು. 


ಗುರುವಾರ, ಮಾರ್ಚ್ 14, 2019

ಇಂದಿರಾ ಸೋಲು ಸಂಭ್ರಮಿಸಲು ಜನತಾ ಸರಕಾರದಿಂದ 77 ಸಾಫ್ಟ್ ಡ್ರಿಂಕ್!

1977ರಲ್ಲಿ ಇಂದಿರಾ ಗಾಂಧಿ ಸೋತರು. ಜನತಾ ಪಾರ್ಟಿ ಅಧಿಕಾರಕ್ಕೆ ಬಂತು. ಅದೇ ಸಮಯದಲ್ಲಿ ಕೋಕಾ ಕೋಲಾ ಕಂಪನಿಯನ್ನು ದೇಶದಿಂದ ಹೊರ ಹಾಕಲಾಯಿತು. ಆಗ ಕೇಂದ್ರ ಸರಕಾರವೇ ಜನರಿಗೋಸ್ಕರ ಡಬಲ್ ಸೆವೆನ್(77) ತಂಪು ಪಾನೀಯವನ್ನು ಬಿಡುಗಡೆ ಮಾಡಿತು. ಇಂದಿರಾ ಸೋಲ ಸಂಭ್ರಮ ಮತ್ತು ತುರ್ತು ಪರಿಸ್ಥಿತಿಯನ್ನು ಜನರು ಮರೆಯಬಾರದು ಎಂಬುದು ಇದರ ಹಿಂದಿನ ಉದ್ದೇಶವಾಗಿತ್ತು. 



1977ರಲ್ಲಿ ಇಂದಿರಾ ಗಾಂಧಿ ಸೋತರು. ಇದರ ನೆನಪಿಗಾಗಿಯೇ ಜನತಾ ಸರಕಾರವೇ ದೇಸಿ ಸಾಫ್ಟ್ ಡ್ರಿಂಕ್ ‘ಡಬಲ್ ಸೆವೆನ್(77)’ ಉತ್ಪಾದನೆ ಆರಂಭಿಸಿತೆಂದರೆ ನಂಬುವಿರಾ ? 

ಹೌದು. ನಂಬಲೇಬೇಕು. 1975ರಲ್ಲಿ ತುರ್ತು ಪರಿಸ್ಥಿತಿ ಹೇರಿದ್ದ ಇಂದಿರಾ ಗಾಂಧಿ ದೇಶವಾಸಿಗಳ ಕಣ್ಣಲ್ಲಿ ಖಳನಾಯಕಿಯಾಗಿದ್ದರು. ಮತ್ತೊಂದೆಡೆ, ಜಯಪ್ರಕಾಶ್ ನಾರಾಯಣ್ ಅವರ ಮಾರ್ಗದರ್ಶನದಲ್ಲಿ ಕಾಂಗ್ರೆಸ್ ಹೊರತುಪಡಿಸಿ ಬಹುತೇಕ ಪಕ್ಷಗಳು ಜನತಾ ಪಾರ್ಟಿಯಡಿ ಒಗ್ಗೂಡಿ 1977ರಲ್ಲಿ ಚುನಾವಣೆ ಎದುರಿಸಿ, ಐತಿಹಾಸಿಕ ಗೆಲುವು ಸಾಧಿಸಿದವು. ಮೊದಲ ಬಾರಿಗೆ ಕಾಂಗ್ರೆಸೇತರ ಸರಕಾರ ಅಸ್ತಿತ್ವಕ್ಕೆ ಬಂತು. ಮೊರಾರ್ಜಿ ದೇಸಾಯಿಪ್ರಧಾನಿಯಾದರು. 

ಇದೇ ಸಂದರ್ಭದಲ್ಲಿಕೋಕಾ ಕೋಲಾ, ಐಬಿಎಂ ಸೇರಿದಂತೆ ಕೆಲವು ಬಹುರಾಷ್ಟ್ರೀಯ ಕಂಪನಿಗಳು ಹೂಡಿಕೆಗೆ ಸಂಬಂಧಿಸಿದ ನಿಯಮಗಳನ್ನು ಉಲ್ಲಂಘಿಸಿದ ಆರೋಪ ಎದುರಿಸುತ್ತಿದ್ದವು. ಆಗ ಕೈಗಾರಿಕಾ ಸಚಿವರಾಗಿದ್ದ ಜಾರ್ಜ್ ಫರ್ನಾಂಡಿಸ್ ಅವರು ಐಬಿಎಂ ಮತ್ತುಕೋಕಾ ಕೋಲಾ ಕಂಪನಿಗೆ ದೇಶ ತೊರೆಯುವಂತೆ ಸೂಚಿಸಿದರು. ಈ ಹಂತದಲ್ಲಿ ದೇಶದ ಜನರಿಗೆ ದೇಸಿ ಸಾಫ್ಟ್ ಡ್ರಿಂಕ್ ಪರಿಚಯಿಸಲು ಸರಕಾರವೇ ಮುಂದಾಯಿತು. ಆದರೆ, ಅದಕ್ಕೆ ಬೇಕಿದ್ದ ಫಾರ್ಮುಲಾವನ್ನುಕೋಕಾ ಕೋಲಾ ಕಂಪನಿ ಬಿಟ್ಟುಕೊಡಲಿಲ್ಲ. ಆದರೆ, ಜನತಾ ಸರಕಾರ ಮಾತ್ರ ಪಟ್ಟು ಬಿಡದೆ ದೇಸಿ ಸಾಫ್ಟ್ಡ್ರಿಂಕ್ ಪರಿಚಯಿಸಿ, ಅದಕ್ಕೆ 77 (ಡಬಲ್ ಸೆವೆನ್)ಎಂದು ಹೆಸರಿಟ್ಟಿತು !

ಹಾಗೆ ಹೆಸರಿಡಲು ಕಾರಣ- ಇಂದಿರಾ ಗಾಂಧಿಯನ್ನು ಸೋಲಿಸಿ ಜನತಾ ಪಾರ್ಟಿ ಅಧಿಕಾರಕ್ಕೇರಿದ ವರ್ಷ 1977. ಭವಿಷ್ಯದಲ್ಲೂ ಜನತೆತುರ್ತು ಪರಿಸ್ಥಿತಿ ಹಾಗೂ ಅದರ ವಿರುದ್ಧ ನಡೆದ ಹೋರಾಟವನ್ನು ಭಾರತೀಯರುಮರೆಯಲೇಬಾರದು ಎಂಬುದು ಸರಕಾರದ ಉದ್ದೇಶವಾಗಿತ್ತು. ನಿಂಬೆ ಫ್ಲೇವರಿನ ‘ಡಬಲ್ ಸೆವೆನ್ ಟಿಂಗಲ್’ ಎಂಬ ಈಡ್ರಿಂಕ್ ತುಸು ಕಿಕ್ಕೇರಿಸುತಿತ್ತು.ಮುಂದೆಜನತಾ ಪಾರ್ಟಿ ತನ್ನ ಆಂತರಿಕ ಕಚ್ಚಾಟದಿಂದಾಗಿಯೇ 1979ರಲ್ಲಿ ಅಧಿಕಾರದಿಂದ ಕೆಳಗಿಳಿಯಿತು. ಬಳಿಕ ನಡೆದ ಚುನಾವಣೆಯಲ್ಲಿ ಮತ್ತೆ ಇಂದಿರಾ ಗಾಂಧಿ ಪ್ರಚಂಡ ಬಹುಮತದೊಂದಿಗೆ ಪ್ರಧಾನಿಯಾದರು. ಇಂದಿರಾ ಅವರು ಡಬಲ್ ಸೆವೆನ್ಬಗ್ಗೆ ಅಷ್ಟೇನೂ ಆಸಕ್ತಿ ತೋರಿಸಲಿಲ್ಲ. ಅಂತಿಮವಾಗಿ ಅದು ಮಾರುಕಟ್ಟೆಯಿಂದ ಕಣ್ಮರೆಯಾಯಿತು.
- ಮಲ್ಲಿಕಾರ್ಜುನ ತಿಪ್ಪಾರ

ಈ ಲೇಖನವು ವಿಜಯ ಕರ್ನಾಟಕದ 14-03-2019ರ ಸಂಚಿಕೆಯಲ್ಲಿ ಪ್ರಕಟವಾಗಿದೆ.

ಮಂಗಳವಾರ, ಮಾರ್ಚ್ 12, 2019

ಕಾಂಗ್ರೆಸ್, ಬಿಜೆಪಿಗೆ ಪರ್ಯಾಯ ಶಕ್ತಿ ಸಿಪಿಐ(ಎಂ)

ಸಿಪಿಐ(ಎಂ) ಅನ್ನು ಸಾಮಾನ್ಯವಾಗಿ ಸಿಪಿಎಂ ಎಂದು ಕರೆಯುತ್ತಾರೆ. ಕಮ್ಯುನಿಸ್ಟ್‌ ಪಾರ್ಟಿ ಇಂಡಿಯಾ(ಸಿಪಿಐ)ದಿಂದ ಪ್ರತ್ಯೇಕಗೊಂಡು 1964 ಅಕ್ಟೋಬರ್‌ 31ರಂದು ಕಮ್ಯುನಿಸ್ಟ್‌ ಪಾರ್ಟಿ ಆಫ್‌ ಇಂಡಿಯಾ(ಮಾರ್ಕ್ಸ್‌ವಾದ) ರಚನೆಯಾಯಿತು. 1964ರಲ್ಲಿ ಕೋಲ್ಕತ್ತಾದಲ್ಲಿ ನಡೆದ ಕಮ್ಯುನಿಸ್ಟ್‌ ಪಾರ್ಟಿ ಇಂಡಿಯಾದ 7ನೇ ಸಮಾವೇಶದಲ್ಲಿ ಪಕ್ಷ ಇಬ್ಭಾಗವಾಯಿತು. ಸದ್ಯ, ಸಿಪಿಎಂ ಕೇರಳದಲ್ಲಿ ಅಧಿಕಾರದಲ್ಲಿದ್ದು, ಒಟ್ಟು 8 ರಾಜ್ಯಗಳಲ್ಲಿ ಚುನಾಯಿತ ಪ್ರತಿನಿಧಿಗಳನ್ನು ಹೊಂದಿದೆ. ಕೇರಳ, ಪಶ್ಚಿಮ ಬಂಗಾಳ, ತ್ರಿಪುರಾ ರಾಜ್ಯದಲ್ಲಿ ದಟ್ಟ ಪ್ರಭಾವ ಹೊಂದಿರುವ ಸಿಪಿಎಂ, ಹಿಮಾಚಲ ಪ್ರದೇಶ, ಮಹಾರಾಷ್ಟ್ರ, ಒಡಿಶಾ, ರಾಜಸ್ಥಾನದಲ್ಲೂ ತನ್ನ ಅಸ್ತಿತ್ವವನ್ನು ಕಾಯ್ದುಕೊಂಡಿದೆ. ಪಾಲಿಟ್‌ಬ್ಯೂರೊ ಈ ಪಕ್ಷ ದ ಅತ್ಯುನ್ನತ ನಿರ್ಧಾಕ ಕೈಗೊಳ್ಳುವ ಸಂಸ್ಥೆಯಾಗಿದೆ. ಸಿಪಿಎಂನ ಪ್ರಧಾನ ಕಾರ್ಯದರ್ಶಿಯಾಗಿ ಸೀತಾರಾಮ್‌ ಯಚೂರಿ ಅವರು ಈಗ ಕಾರ್ಯನಿರ್ವಹಿಸುತ್ತಿದ್ದಾರೆ. ಲೋಕಸಭೆಯಲ್ಲಿ ಪಿ. ಕರುಣಾಕರನ್‌ ಅವರು ಪಕ್ಷ ದ ನಾಯಕರಾಗಿದ್ದಾರೆ. ಲೋಕಸಭೆಯಲ್ಲಿ 9, ರಾಜ್ಯಸಭೆಯಲ್ಲಿ 5 ಸಂಸದರನ್ನು ಹೊಂದಿರುವ ಸಿಪಿಎಂ, ಕೇರಳದಲ್ಲಿ 59, ತ್ರಿಪುರಾದಲ್ಲಿ 16 ಮತ್ತು ಪಶ್ಚಿಮ ಬಂಗಾಳದಲ್ಲಿ 26 ಶಾಸಕರನ್ನು ಹೊಂದಿದೆ. ಇನ್ನುಳಿದಂತೆ ಬೇರೆ ಬೇರೆ ರಾಜ್ಯಗಳಲ್ಲಿ ಒಟ್ಟು 7 ಶಾಸಕರು ಸಿಪಿಎಂನಿಂದ ಆಯ್ಕೆಯಾಗಿದ್ದಾರೆ. ಮಾರ್ಕ್ಸ್‌ ಮತ್ತು ಲೆನಿನ್‌ ವಾದ ಸಿಪಿಎಂ ಪ್ರಮುಖ ಸಿದ್ಧಾಂತವಾಗಿದೆ. ಪಶ್ಚಿಮ ಬಂಗಾಳದಲ್ಲಿ ಜ್ಯೋತಿ ಬಸು ನೇತೃತ್ವದಲ್ಲಿ ದೀರ್ಘಾವಧಿಯವರೆಗೆ ಸಿಪಿಎಂ ಅಧಿಕಾರದಲ್ಲಿತ್ತು. ಹಾಗೆಯೇ, 1996ರಲ್ಲಿ ಪ್ರಧಾನಿ ಹುದ್ದೆ ಸಿಪಿಎಂ ನಾಯಕರಿಗೆ ಒಲಿದು ಬಂದಿತ್ತು. ರಾಷ್ಟ್ರದಾದ್ಯಂತ ಪಕ್ಷ ವನ್ನು ಬಲಪಡಿಸುವ ಅನೇಕ ಅವಕಾಶಗಳನ್ನು ಕೈ ಚೆಲ್ಲಿದೆ. ಇತ್ತೀಚಿನ ವರ್ಷಗಲ್ಲಂತೂ ಗಟ್ಟಿ ಬೇರುಗಳನ್ನು ಹೊಂದಿದ್ದ ಪಶ್ಚಿಮ ಬಂಗಾಳ, ತ್ರಿಪುರಾದಲ್ಲಿ ತನ್ನ ನೆಲೆಯನ್ನು ಕಳೆದುಕೊಳ್ಳುತ್ತಿರುವುದು ಸ್ಪಷ್ಟವಾಗಿ ಗೋಚರವಾಗುತ್ತಿದೆ. ಕೇರಳ ಮಾತ್ರ ಸಿಪಿಎಂ ಇದೀಗ ಆಸರೆಯಾಗಿ ಉಳಿದಿದೆ. ಇ ಎಂ ಎಸ್‌ ನಂಬೂದರಿಪಾದ್‌, ಹರಿಕಿಶನ್‌ ಸಿಂಗ್‌ ಸುರ್ಜಿತ್‌, ಪ್ರಕಾಶ್‌ ಕಾರಟ್‌, ಜ್ಯೋತಿ ಬಸು, ಬುದ್ಧದೇವ್‌ ಭಟ್ಟಾಚಾರ್ಯ, ಮಾಣಿಕ್‌ ಸರ್ಕಾರ್‌, ಈಗ ಕೇರಳ ಮುಖ್ಯಮಂತ್ರಿಯಾಗಿರುವ ಪಿಣರಾಯಿ ವಿಜಯನ್‌, ಸೀತಾರಾಮ್‌ ಯಚೂರಿ ಅವರು ಸಿಪಿಎಂನ ಪ್ರಮುಖ ನಾಯಕರು. ಕುಡುಗೋಲು ಮತ್ತು ಸುತ್ತಿಗೆಯು ಈ ಪಕ್ಷ ದ ಚುನಾವಣಾ ಚಿಹ್ನೆಯಾಗಿದೆ. 

13 ದಿನ ಬಳಿಕ 13 ತಿಂಗ್ಳು ಪ್ರಧಾನಿಯಾದ್ರು ವಾಜಪೇಯಿ

ಈ ಹಿಂದಿನ ಸಾರ್ವತ್ರಿಕ ಚುನಾವಣೆಯಲ್ಲಿ ಜನರು ಅತಂತ್ರ ಪಾರ್ಲಿಮೆಂಟ್‌ಗೆ ಕಾರಣವಾಗಿದ್ದರಿಂದಲೇ ಮತ್ತೊಂದು ಚುನಾವಣೆಯನ್ನು ದೇಶ ಎದುರಿಸಬೇಕಾಯಿತು. ಆದರೆ, ಈ ಚುನಾವಣೆಯಲ್ಲೂ ಯಾವುದೇ ಪಕ್ಷ ಅಥವಾ ಕೂಟಕ್ಕೆ ಬಹುಮತ ಬರಲಿಲ್ಲ. ಹಾಗಾಗಿ ರಾಜಕೀಯ ಅಸ್ಥಿರತೆ ಮುಂದುವರಿಯಿತು. ಅಲ್ಲದೆ ಕೇವಲ ಎರಡು ವರ್ಷದಲ್ಲೇ ಮತ್ತೊಂದು ಚುನಾವಣೆ ಎದುರಿಸಬೇಕಾಯಿತು. 12ನೇ ಲೋಕಸಭೆಗೆ 1998ರಲ್ಲಿ ನಡೆದ ಚುನಾವಣೆಯಲ್ಲಿ ಶೇ.25.8ರಷ್ಟು ಮತಗಳೊಂದಿಗೆ ಬಿಜೆಪಿ ಅತಿದೊಡ್ಡ ಪಕ್ಷ ವಾಗಿ ಉದಯವಾಯಿತು; ಒಟ್ಟು 141 ಕ್ಷೇತ್ರಗಳನ್ನು ಗೆದ್ದುಕೊಂಡಿತು. ಬಿಜೆಪಿ ನೇತೃತ್ವದ ಎನ್‌ಡಿಎ ಒಟ್ಟು 545 ಸೀಟುಗಳ ಪೈಕಿ 256 ಸೀಟುಗಳನ್ನು ಪಡೆಯಿತು. ಅದೇ ರೀತಿ, ಕಾಂಗ್ರೆಸ್‌ ನೇತೃತ್ವದ ಯುಪಿಎ ಶೇ.30.8ರಷ್ಟು ಮತ ಪಡೆದು ಒಟ್ಟು 164 ಸೀಟುಗಳನ್ನು ಪಡೆಯಿತು. ಕಾಂಗ್ರೆಸ್‌ ಸ್ವತಂತ್ರವಾಗಿ 140 ಕ್ಷೇತ್ರಗಳಲ್ಲಿ ಗೆಲುವಿನ ನಗೆ ಬೀರಿತು. ತೃತೀಯ ರಂಗ ಕೇವಲ 74 ಕ್ಷೇತ್ರಗಳಿಗೆ ತೃಪ್ತಿ ಪಡಬೇಕಾಯಿತು. ಅತಿ ದೊಡ್ಡ ಪಕ್ಷ ವಾಗಿದ್ದ ಬಿಜೆಪಿಗೆ ಸರಕಾರ ರಚನೆ ಮಾಡಲು ಅವಕಾಶ ದೊರೆಯಿತು. ಅಟಲ್‌ ಬಿಹಾರಿ ವಾಜಪೇಯಿ ಅವರು ಎರಡನೇ ಬಾರಿಗೆ ಪ್ರಧಾನಿಯಾದರು. ಆದರೆ, ರಾಜಕೀಯ ಸ್ಥಿರತೆ ಮಾತ್ರ ಕಂಡು ಬರಲಿಲ್ಲ. ಅಂತಿಮವಾಗಿ 13 ತಿಂಗಳು ಬಳಿಕ ವಾಜಪೇಯಿ ಸರಕಾರ ಪತನವಾಯಿತು. ಜಯಲಲಿತಾ ನೇತೃತ್ವದ ಎಐಎಡಿಎಂಕೆ ವಿಶ್ವಾಸಮತ ಸಾಬೀತುವೇಳೆ ಎನ್‌ಡಿಎಗೆ ಬೆಂಬಲ ನೀಡಿಲಲ್ಲ. ಕೇವಲ ಒಂದು ಮತದ ಅಂತರದಲ್ಲಿ ಬಿಜೆಪಿ ಸರಕಾರ ಉರುಳಿತು. ಬಳಿಕ ರಾಷ್ಟ್ರಪತಿಗಳು ಎರಡನೇ ಅತಿದೊಡ್ಡ ಪಕ್ಷ ವಾಗಿದ್ದ ಕಾಂಗ್ರೆಸ್‌ಗೆ ಸರಕಾರ ರಚಿಸಲು ಆಹ್ವಾನ ನೀಡಿದರು. ಆದರೆ, ಕಾಂಗ್ರೆಸ್‌ ಮಾತ್ರ ತನ್ನಿಂದ ಸರಕಾರ ರಚನೆ ಸಾಧ್ಯವಿಲ್ಲ ಎಂದು ಹೇಳಿದ್ದರಿಂದ, ಅವರು ಸಂಸತ್ತನ್ನು ವಿಸರ್ಜಿಸಿದರು. 1998ರ ಚುನಾವಣೆಯಲ್ಲಿ ಒಟ್ಟು 60,58,80,192 ಮತದಾರರಿದ್ದರು. ಈ ಪೈಕಿ 37,54,41,739 ಮತದಾರರು ತಮ್ಮ ಹಕ್ಕು ಚಲಾಯಿಸಿದರು. ಅಂದರೆ ಒಟ್ಟು ಮತದಾನ ಪ್ರಮಾಣ ಶೇ.62ರಷ್ಟಿತ್ತು. ಒಟ್ಟು 178 ರಾಜಕೀಯ ಪಕ್ಷ ಗಳು ಈ ಚುನಾವಣೆಯಲ್ಲಿ ಭಾಗವಹಿಸಿದ್ದವು. 13 ದಿನ ಮತ್ತು 13 ತಿಂಗಳ ಪ್ರಧಾನಿಯಾಗಿದ್ದ ವಾಜಪೇಯಿ ಅವರು ವಿಶಿಷ್ಟ ದಾಖಲೆ ಮಾಡಿದರು.
- ತಿಪ್ಪಾರ

ಈ ಲೇಖನ ವಿಜಯ ಕರ್ನಾಟಕದಲ್ಲಿ ಪ್ರಕಟವಾಗಿದೆ.

ಭಾನುವಾರ, ಮಾರ್ಚ್ 10, 2019

ಜನಪ್ರಿಯ ರಾಜಕಾರಣದ ಎಐಎಡಿಎಂಕೆ

ದೇಶದ ಪ್ರಬಲ ಪ್ರಾದೇಶಿಕ ಪಕ್ಷ ಗಳ ಪೈಕಿ ಆಲ್‌ ಇಂಡಿಯಾ ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂ(ಎಐಎಡಿಎಂಕೆ) ಕೂಡ ಒಂದು. ಸದ್ಯ ತಮಿಳುನಾಡುರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಎಐಎಡಿಎಂಕೆ, ಪುದುಚೆರಿಯಲ್ಲೂ ತನ್ನ ಪ್ರಭಾವ ಹೊಂದಿದೆ. ತಮಿಳುನಾಡಿನ ಜನಪ್ರಿಯ ನಟ ಮತ್ತು ರಾಜಕಾರಣಿ ಎಂ.ಜಿ.ರಾಮಚಂದ್ರನ್‌ ಅವರು ಈ ಪಕ್ಷ ವನ್ನು ಸ್ಥಾಪಿಸಿದರು. ಡಿಎಂಕೆಯಿಂದಲೇ ರಾಜಕಾರಣ ಆರಂಭಿಸಿದ್ದ ಎಂಜಿಆರ್‌, 1972ರಲ್ಲಿ ಅದರಿಂದ ಹೊರ ಬಂದು ಎಐಎಡಿಎಂಕೆ ಸ್ಥಾಪಿಸಿದರು. 1997ರ ತಮಿಳುನಾಡು ವಿಧಾಸಭೆ ಚುನಾವಣೆಯಲ್ಲಿ ಎಐಎಡಿಎಂಕೆ ಅಧಿಕಾರಕ್ಕೆ ಬಂತು. ಎಂಜಿಆರ್‌ ಮುಖ್ಯಮಂತ್ರಿಯಾದರು. 1987ರವರೆಗೂ ಅಂದರೆ, ತಮ್ಮ ಸಾವಿನವರೆಗೂ ಎಂಜಿಆರ್‌ ಮುಖ್ಯಮಂತ್ರಿಯಾಗಿದ್ದರು. ಅವರ ನಿಧನ ಬಳಿಕ ನಾಯಕತ್ವಕ್ಕೆ ಸಂಬಂಧಿಸಿದಂತೆ ಎಂಜಿಆರ್‌ ಪತ್ನಿ ಜಾನಕಿ ರಾಮಚಂದ್ರನ್‌ ಮತ್ತು ಜಯಲಲಿತಾ ಮಧ್ಯೆ ಸಂಘರ್ಷವೇ ನಡೆಯಿತು. ಜಾನಕಿ ರಾಮಚಂದ್ರನ್‌ ಅವರಿಗೆ 98 ಶಾಸಕರು ಬೆಂಬಲ ನೀಡಿದ್ದರಿಂದ ಕೇವಲ 24 ದಿನಗಳ ಮಟ್ಟಿಗೆ ಅವರು ಸಿಎಂ ಆದರು. ವಿಧಾನಸಭೆ ಅಮಾನತ್ತಿನಲ್ಲಿಡಲಾಯಿತು. ಬಳಿಕ ನಡೆದ ಚುನಾವಣೆಯಲ್ಲಿ ಜಾನಕಿ ಹಾಗೂ ಜಯಲಲಿತಾ ನೇತೃತ್ವದ ಎಐಎಡಿಎಂಕೆ ಎರಡೂ ಗುಂಪುಗಳು ಹೀನಾಯವಾಗಿ ಸೋತವು. ಡಿಎಂಕೆ ಅಧಿಕಾರಕ್ಕೆ ಬಂತು. ಈ ಸೋಲಿನ ಬಳಿಕ ಜಯಲಲಿತಾ ನೇತೃತ್ವದಲ್ಲಿ ಎಐಎಡಿಎಂಕೆ ಮತ್ತೆ ಒಂದಾಯಿತು. 1991ರ ಚುನಾವಣೆಯಲ್ಲಿ ಕಾಂಗ್ರೆಸ್‌ ಜತೆಗೂಡಿ ವಿಧಾನಸಭೆಗೆ ಭರ್ಜರಿಯಾಗಿ ಎಂಟ್ರಿ ಕೊಟ್ಟ ಜಯಲಲಿತಾ ಮುಖ್ಯಮಂತ್ರಿಯಾದರು. ಇಲ್ಲಿಂದ ಜಯಾ ರಾಜಕಾರಣ ಪರ್ವ ಶುರುವಾಯಿತು. ಮುಂದೆ 1998ರ ಲೋಕಸಭೆ ಚುನಾವಣೆ ಹೊತ್ತಿಗೆ ಜಯಲಲಿತಾ ಬಿಜೆಪಿ, ಎಂಡಿಎಂಕೆ ಜತೆ ಮೈತ್ರಿಕೂಟ ರಚಿಸಿಕೊಂಡರು. ಕೇಂದ್ರದಲ್ಲಿ ವಾಜಪೇಯಿ ಸರಕಾರಕ್ಕೆ ನೀಡಿದ್ದ ಬೆಂಬಲ ವಾಪಸ್‌ ಪಡೆದು ಸರಕಾರ ಪತನಕ್ಕೆ ಕಾರಣರಾದರು. ಜಯಲಲಿತಾ ಅವರು 1991- 1996, 2001, 2002- 2006, 2011- 2014, 2015ಧಿ-2016 ಅವಧಿಯಲ್ಲಿ ಮುಖ್ಯಯಂತ್ರಿಯಾಗಿದ್ದರು. ಎಂಜಿಆರ್‌ ಬಳಿಕ ಪಕ್ಷ ಕ್ಕೆ ಜಯಲಲಿತಾ ಅವರು ಗಟ್ಟಿ ನಾಯಕತ್ವ ಒದಗಿಸಿದ್ದರು. ಆದರೆ, ಜಯಾ ಸಾವಿನ ಬಳಿಕ ಮತ್ತೆ ನಾಯಕತ್ವದ ಕಿತ್ತಾಟ ಶುರವಾಗಿದೆ. ಎಂಜಿಆರ್‌ ಮತ್ತು ಜಯಲಲಿತಾ ಇಬ್ಬರೂ ಜನಪ್ರಿಯ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ಪ್ರಸಿದ್ಧ ಪಡೆದರು. ಪ್ರಸಕ್ತ ಲೋಕಸಭೆ ಚುನಾವಣೆಯನ್ನು ಎಐಎಡಿಎಂಕೆಯು ಬಿಜೆಪಿ ಜತೆಗೂಡಿ ಎದುರಿಸುತ್ತಿದೆ. 

ಸರಕಾರ ರಚಿಸಿದ ಮೊದಲ ಪ್ರಾದೇಶಿಕ ಪಕ್ಷ ಡಿಎಂಕೆ

ಪ್ರಾದೇಶಿಕ ಪಕ್ಷ ಗಳು ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರಬಹುದು ಎಂಬುದನ್ನು ದ್ರಾವಿಡ್‌ ಮುನ್ನೇತ್ರ ಕಳಗಂ(ಡಿಎಂಕೆ) ತೋರಿಸಿಕೊಟ್ಟಿತ್ತು. ಪ್ರಾದೇಶಿಕ ಪಕ್ಷ ಗಳ ಪೈಕಿ ತುಂಬ ಹಳೆಯದಾದ ಡಿಎಂಕೆ, ನಮ್ಮ ರಾಜ್ಯದ ನೆರೆಯ ತಮಿಳುನಾಡು ಮತ್ತು ಪುದುಚೆರಿಯಲ್ಲಿ ತನ್ನ ಪ್ರಾಬಲ್ಯ ಹೊಂದಿದೆ. ತಮಿಳುನಾಡಿನಲ್ಲಿ ಸದ್ಯ ಪ್ರತಿಪಕ್ಷ ಸ್ಥಾನದಲ್ಲಿದೆ. ಈ ಪಕ್ಷ ದ ಜನಪ್ರಿಯ ನಾಯಕರೆಂದರೆ, ಸಿ.ಎನ್‌.ಅಣ್ಣಾದೊರೈ, ಎಂ. ಕರುಣಾನಿಧಿ, ಎಂಜಿಆರ್‌(ಪಕ್ಷ ತೊರೆದು ತಮ್ಮದೇ ಆದ ಎಐಡಿಎಂಕೆ ಸ್ಥಾಪಿಸಿದರು), ಎಂ.ಕೆ.ಸ್ಟಾಲಿನ್‌, ಕನ್ನಿಮೋಳಿ... ಮುಂತಾದವರು. ಕರುಣಾನಿಧಿ ಅವರು ಐದು ಬಾರಿಗೆ ತಮಿಳುನಾಡು ಮುಖ್ಯಂತ್ರಿಯಾಗಿದ್ದರು. ಅಲ್ಲದೆ, 1969ರಿಂದ ಅವರು ತಮ್ಮ ಸಾವಿನ ದಿನವರೆಗೂ ಅಂದರೆ 2018ರ ಅಗಸ್ಟ್‌ 7ರವರೆಗೂ ಡಿಎಂಕೆಯ ನೇತೃತ್ವ ವಹಿಸಿದ್ದರು. ಕಾಂಗ್ರೆಸ್‌ ಹೊರತುಪಡಿಸಿ ರಾಜ್ಯಗಳಲ್ಲಿ ಪ್ರಾದೇಶಿಕ ಪಕ್ಷ ವೊಂದು ಸ್ವಂತ ಸರಕಾರ ರಚಿಸಬಹುದು ಎಂಬುದನ್ನು ಡಿಎಂಕೆಸಾಧಿಸಿ ತೋರಿಸಿತು. ಇದು ಮುಂದೆ ಬಹಳಷ್ಟು ಪ್ರಾದೇಶಿಕ ಪಕ್ಷ ಗಳಿಗೆ ದಾರಿ ಮಾಡಿಕೊಟ್ಟಿತ್ತು. ಡಿಎಂಕೆಯ ಮೂಲ ಜಸ್ಟೀಸ್‌ ಪಾರ್ಟಿಯಲ್ಲಿದೆ. ಕಾಂಗ್ರೆಸ್‌ನಲ್ಲಿದ್ದ ಪೆರಿಯಾರ್‌ ಇ.ವಿ.ರಾಮಸ್ವಾಮಿ ಅವರು ಜಸ್ಟೀಸ್‌ ಪಾರ್ಟಿಯನ್ನು 1935ರಲ್ಲಿ ಸೇರಿದರು. ಬಳಿಕ ದ್ರಾವಿಡರ್‌ ಕಳಗಂ ಸ್ಥಾಪಿಸಿ, ದ್ರಾವಿಡರಿಗೆ ಪ್ರತ್ಯೇಕ ರಾಷ್ಟ್ರ ಬೇಡಿಕೆ ಹಾಗೂ ಹಿಂದಿ ವಿರೋಧಿ ಪ್ರಮುಖ ಅದರ ಪ್ರಮುಖ ನೀತಿಗಳಾಗಿದ್ದವು. ಆದರೆ, ನಂತರದ ದಿನಗಳಲ್ಲಿ ಪ್ರತ್ಯೇಕ ರಾಷ್ಟ್ರ ಹೋರಾಟ ಕೈಬಿಡಲಾಯಿತು. ಈ ಸೈದ್ಧಾಂತಿಕ ವಿಚಾರಧಾರೆಯು ಡಿಎಂಕೆಗೂ ಹರಿದು ಬಂತು. ಆಗ ರಾಮಸ್ವಾಮಿ ಅವರಿಗೆ ಹೆಗಲು ನೀಡಿದ್ದ ಅಣ್ಣಾದೊರೈ ಅವರು ದ್ರಾವಿಡರ್‌ ಕಳಗಂನಿಂದ ಹೊರಬಂದು ಡಿಎಂಕೆ ಸ್ಥಾಪಿಸಿದರು. ನಂತರ ಅಣ್ಣಾದೊರೈ ಜತೆಯಾಗಿ ಹೆಜ್ಜೆ ಹಾಕಿದವರು ಕರುಣಾನಿಧಿ ಅವರು. ಸದ್ಯ ಡಿಎಂಕೆ ನಾಯಕತ್ವವನ್ನು ಅವರ ಪುತ್ರ ಎಂ.ಕೆ. ಸ್ಟಾಲಿನ್‌ ವಹಿಸಿದ್ದಾರೆ. ಪ್ರಾದೇಶಿಕತೆ, ಹಿಂದಿ ಹೇರಿಕೆ ವಿರೋಧಿ ನೀತಿ, ಸಾಮಾಜಿಕ ಪ್ರಜಾಪ್ರಭುತ್ವ ನೀತಿಯನ್ನು ಡಿಎಂಕೆ ಅಳವಡಿಸಿಕೊಂಡಿದೆ. ಜನಪ್ರಿಯ ನಾಯಕ ಎಂಜಿಆರ್‌ ಕೂಡ ಡಿಎಂಕೆ ಭಾರಿ ಬಲ ತುಂಬಿದ್ದರು. ಆದರೆ, ಅವರು ಭಿನ್ನಾಭಿಪ್ರಾಯದಿಂದಾಗಿ ಡಿಎಂಕೆಯಿಂದ ಹೊರ ನಡೆದು, ತಮ್ಮದೇ ಆದ ಎಐಡಿಎಂಕೆ ಸ್ಥಾಪಿಸಿದರು. ಮುಂದೆ ತಮಿಳುನಾಡಲ್ಲಿ ಡಿಎಂಕೆ ಮತ್ತು ಎಐಡಿಎಂಕೆ ನಡುವಿನ ಹೋರಾಟವೇ ರಾಜಕಾರಣವಾಯಿತು. ಸದ್ಯ ಡಿಎಂಕೆ ಯುಪಿಎ ಭಾಗವಾಗಿದೆ. 

ಶುಕ್ರವಾರ, ಮಾರ್ಚ್ 8, 2019

ತೆಲುಗು ಅಸ್ಮಿತೆ ರಾಜಕಾರಣದ ಟಿಡಿಪಿ

ಟಿಡಿಪಿ ಎಂದು ಹೆಚ್ಚು ಪ್ರಚಲಿತವಾಗಿರುವ ತೆಲುಗು ದೇಶಂ ಪಾರ್ಟಿ, ಸಂಸತ್ತಿನಲ್ಲಿ ಪ್ರತಿಪಕ್ಷ ಸ್ಥಾ ನ ನಿರ್ವಹಿಸಿದ ಮೊದಲ ಪ್ರಾದೇಶಿಕ ಪಕ್ಷ ಎಂಬ ಹೆಗ್ಗಳಿಕೆ ಹೊಂದಿದೆ. ಟಿಡಿಪಿ ಸದ್ಯ ಆಂಧ್ರದಲ್ಲಿ ಆಡಳಿತ ನಡೆಸುತ್ತಿದ್ದರೆ, ತೆಲಂಗಾಣದಲ್ಲಿ ತನ್ನ ಪ್ರಭಾವ ಹೊಂದಿದೆ. ತೆಲುಗು ಭಾಷೆಯ ಅಸ್ಮಿತೆಗಾಗಿ ತೆಲುಗು ದೇಶಂ ಪಾರ್ಟಿಯನ್ನು ಪ್ರಖ್ಯಾತ ನಟ ಎನ್‌.ಟಿ.ರಾಮರಾವ್‌ ಅವರು 1982ರ ಮಾರ್ಚ್‌ 29ರಂದು ಆರಂಭಿಸಿದರು. ಸದ್ಯ ಆಂಧ್ರದ ಮುಖ್ಯಮಂತ್ರಿ ಆಗಿರುವ ಚಂದ್ರಬಾಬು ನಾಯ್ಡು ಅವರು 1995ರಿಂದ ಟಿಡಿಪಿ ನೇತೃತ್ವ ವಹಿಸಿದ್ದಾರೆ. ಎನ್‌ಟಿಆರ್‌ ಅವರು ಜನಪ್ರಿಯ ಎಷ್ಟಿತ್ತೆಂದರೆ, ಟಿಡಿಪಿ ಆರಂಭಿಸಿದ 9 ತಿಂಗಳಲ್ಲೇ ಅವರು ಅಧಿಕಾರಕ್ಕೆ ಬಂದು, ಮೊದಲ ಬಾರಿಗೆ ಸಿಎಂ ಆದರು. 1984ರ ಚುನಾವಣೆಯಲ್ಲಿ ಕಾಂಗ್ರೆಸ್‌ ನಂತರ ಅತಿ ಹೆಚ್ಚು ಸ್ಥಾನ ಗೆದ್ದಿದ್ದರಿಂದ ಪ್ರತಿಪಕ್ಷ ವಾಗಿ ಟಿಡಿಪಿ ಕಾರ್ಯನಿರ್ವಹಿಸಿತು. ಎನ್‌ಟಿಆರ್‌ ಅವರು ತೆಲುಗು ಭಾಷೆ ಮತ್ತು ನಾಡು ಅಸ್ಮಿತೆಯಾಗಿ ಪಕ್ಷ ವನ್ನ ಆರಂಭಿಸಿದರು. ಎಲ್ಲಕ್ಕಿಂತ ಹೆಚ್ಚಾಗಿ ಅವರಿಗೆ ಕಾಂಗ್ರೆಸ್‌ಗೆ ಪರ್ಯಾಯವಾದ ಪಕ್ಷ ವನ್ನು ಹುಟ್ಟುಹಾಕಬೇಕಿತ್ತು. ಹಾಗಾಗಿ, ಟಡಿಪಿಯ ಸೈದ್ಧಾಂತಿಕ ವಿಚಾರಧಾರೆ ತೆಲುಗು ಅಸ್ಮಿತೆಯೇ ಆಗಿದೆ. ಇದರ ಜತೆಗೆ ರೈತರು, ಹಿಂದಿಳಿದವರು ಮತ್ತು ಮಧ್ಯಮ ವರ್ಗದ ಜನರ ಆಶೋತ್ತರಗಳನ್ನು ಈಡೇರಿಸುವುದಕ್ಕೂ ಬದ್ಧವಾಗಿದೆ. 1990ರ ನಂತರ ಟಿಡಿಪಿ ಉದಾರವಾದಕ್ಕೆ ಒತ್ತು ನೀಡಿದ್ದರಿಂದ, ಅದು ಈಗ ಉದ್ಯಮಿಗಳ ಪರ ಮತ್ತು ಅಭಿವೃದ್ಧಿ ಪರ ಎಂಬ ಟ್ಯಾಗ್‌ಲೈನ್‌ ಅಂಟಿಸಿಕೊಂಡಿದೆ. ಲೋಕಸಭೆಯಲ್ಲಿ 15, ರಾಜ್ಯಸಭೆಯಲ್ಲಿ 6 ತನ್ನ ಪ್ರತಿನಿಧಿಗಳನ್ನು ಹೊಂದಿದೆ. ಇನ್ನು ಆಂಧ್ರಪ್ರದೇಶದಲ್ಲಿ ಒಟ್ಟು 102 ಶಾಸಕರೊಂದಿಗೆ ಆಡಳಿತ ಚುಕ್ಕಾಣಿ ಹಿಡಿದಿದೆ. ಕೇಂದ್ರ ರಾಜಕಾರಣದಲ್ಲಿ ತನ್ನದೇ ಆದ ಪ್ರಭಾವ ಹೊಂದಿರುವ ಟಿಡಿಪಿ, ಈ ಹಿಂದೆ ಒಮ್ಮೆ ಯುಪಿಎ ಮತ್ತು ಎನ್‌ಡಿಎಗೆ ಬೆಂಬಲ ನೀಡಿತ್ತು. ಪ್ರಸಕ್ತ ಎನ್‌ಡಿಎ ಜತೆಗೆ ಗುರುತಿಸಿಕೊಂಡಿದ್ದ ನಾಯ್ಡು, ಆಂಧ್ರಕ್ಕೆ ವಿಶೇಷ ಪ್ಯಾಕೇಜ್‌ ನೀಡುತ್ತಿಲ್ಲ ಎಂದು ಆರೋಪಿಸಿ ಕೂಟದಿಂದ ಹೊರ ಬಂದಿದ್ದಾರೆ. ಪಕ್ಷ ದ ಸಂಸ್ಥಾಪಕರಾದ ಎನ್‌ಟಿಆರ್‌ ಅವರು ಒಟ್ಟು ಮೂರು ಬಾರಿ ಆಂಧ್ರ ಸಿಎಂ ಆಗಿದ್ದರು. ಚಂದ್ರಬಾಬು ನಾಯ್ಡು ಎರಡು ಬಾರಿ ಮುಖ್ಯಮಂತ್ರಿಯಾಗಿದ್ದಾರೆ.

ಗುರುವಾರ, ಮಾರ್ಚ್ 7, 2019

ಟಿಎಂಸಿ, ಮಮತಾ ಎಂಬ ಗಟ್ಟಿಗಿತ್ತಿಯ ರಾಜಕಾರಣದ ವೇದಿಕೆ

ಜನತಾ ಪಾರ್ಟಿ ಹೇಗೆ ಅನೇಕ ಹೊಸ ಪ್ರಾದೇಶಿಕ ಪಕ್ಷ ಗಳ ಹುಟ್ಟಿಗೆ ಕಾರಣವಾಯಿತೋ, ಹಾಗೆಯೇ ಕಾಂಗ್ರೆಸ್‌ ಕೂಡ ಅನೇಕ ಪಕ್ಷ ಗಳ ಅಸ್ತಿತ್ವಕ್ಕೆ ದಾರಿ ಮಾಡಿಕೊಟ್ಟಿದೆ. ನಾಯಕತ್ವ ಕಾರಣದಿಂದಾಗಿ ಅನೇಕ ಕಾಂಗ್ರೆಸ್‌ ನಾಯಕರು ತಮ್ಮದೇ ಆದ ಪಕ್ಷ ವನ್ನು ಸಂಘಟಿಸಿ ಯಶಸ್ವಿಯಾಗಿದ್ದಾರೆ. ಈ ಪೈಕಿ ಮಮತಾ ಬ್ಯಾನರ್ಜಿ ಅವರೂ ಪ್ರಮುಖರು. 26 ವರ್ಷಗಳ ಕಾಲ ಕಾಂಗ್ರೆಸ್‌ನಲ್ಲಿ ದುಡಿದಿದ್ದ ಅವರು, 1998 ಜನವರಿ 1ರಂದು ತಮ್ಮದೇ ಆದ ತೃಣಮೂಲ ಕಾಂಗ್ರೆಸ್‌ ಪಕ್ಷ ವನ್ನು ಆರಂಭಿಸಿದರು. 'ಮಾ ಮಾತಿ ಮಾನೂಷ್‌'(ಜನನಿ, ಜನ್ಮಭೂಮಿ ಮತ್ತು ಜನರು) ಎಂಬದು ತೃಣಮೂಲ ಪಕ್ಷ ದ ಧ್ಯೇಯವಾಕ್ಯ ಮತ್ತು ಜನಪ್ರಿಯ ಘೋಷಣೆಯೂ ಹೌದು. 2014ರ ಲೋಕಸಭೆಯ ಚುನಾವಣೆಯಲ್ಲಿ ಶೇ.6ರಷ್ಟು ಮತ ಪಡೆದ ಹಿನ್ನೆಲೆಯಲ್ಲಿ ಭಾರತೀಯ ಚುನಾವಣಾ ಆಯೋಗವು ಈ ಪಕ್ಷ ಕ್ಕೆ ರಾಷ್ಟ್ರೀಯ ಪಕ್ಷ ದ ಮಾನ್ಯತೆ ಹೊಂದಿದೆ. 30 ವರ್ಷಗಳ ಕಾಲ ಎಡ ಪಕ್ಷ ಗಳು ಪಶಿಮ ಬಂಗಾಳದಲ್ಲಿ ಹೊಂದಿದ್ದ ಹಿಡಿತವನ್ನು ಸಡಿಲಿಸಿದ್ದೇ ಈ ಮಮತಾ ಬ್ಯಾನರ್ಜಿ. ಹೋರಾಟದಿಂದಲೇ ತೃಣಮೂಲ ಕಾಂಗೆÜ್ರಸ್‌ ಅನ್ನು ಅಧಿಕಾರದ ಪಡಸಾಲೆಗೆ ತಂದು ನಿಲ್ಲಿಸಿದರು. ಸಜವಾಗಿಯೇ, ಅವರು ಮುಖ್ಯಮಂತ್ರಿಯೂ ಆದರು. ಒಟ್ಟು 42 ಲೋಕಸಭಾ ಕ್ಷೇತ್ರಗಳನ್ನು ಹೊಂದಿರುವ ಪಶ್ಚಿಮ ಬಂಗಾಳದ ಮೇಲೆ ಪ್ರಭುತ್ವ ಸಾಧಿಸಲು ಪ್ರತಿ ಪಕ್ಷ ವೂ ಹಾತೊರೆಯುತ್ತಿದೆ. ಯಾರು ಹೆಚ್ಚು ಸೀಟುಗಳನ್ನು ಗೆಲ್ಲುತ್ತಾರೋ ಅವರು ಸಜವಾಗಿ ಕೇಂದ್ರ ರಾಜಕಾರಣದಲ್ಲಿ ಪ್ರಭಾವವನ್ನು ಗಳಿಸುತ್ತಾರೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಮತ್ತು ಬಿಜೆಪಿ ಹೊರತಾದ ಕೂಟದ ಚರ್ಚೆ ಬಂದಾಗಲೆಲ್ಲ, ಮಮತಾ ಬ್ಯಾನರ್ಜಿ ಅವರು ಹೆಸರು ಮುಂಚೂಣಿಯಲ್ಲಿರುತ್ತದೆ ಮತ್ತು ಅವರು ಪ್ರಧಾನಿ ಹುದ್ದೆಯ ಆಕಾಂಕ್ಷಿಯೂ ಹೌದು. ಪಶ್ಚಿಮ ಬಂಗಾಳ, ತ್ರಿಪುರಾ, ಮಣಿಪುರ, ಜಾರ್ಖಂಡ್‌ ಮತ್ತು ಅಸ್ಸಾಮ್‌ನಲ್ಲಿ ತನ್ನ ಪ್ರಭಾವ ಹೊಂದಿರುವ ತೃಣಮೂಲ ಕಾಂಗ್ರೆಸ್‌ ಲೋಕಸಭೆಯಲ್ಲಿ ಒಟ್ಟು 34 ಸಂಸದರನ್ನು ಹೊಂದಿದ್ದು, ರಾಜ್ಯಸಭೆಯಲ್ಲಿ 13 ಪ್ರತಿನಿಧಿಗಳಿದ್ದಾರೆ. 295 ಬಲದ ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿ ತೃಣಮೂಲ ಕಾಂಗ್ರೆಸ್‌ 213 ಶಾಸಕರನ್ನು ಹೊಂದಿದೆ. 2011ರಲ್ಲಿ ಮೊದಲ ಬಾರಿಗೆ ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್‌ ತನ್ನ ಮಿತ್ರ ಪಕ್ಷ ಗಳ ಸಹಾಯದೊಂದಿಗೆ ಅಧಿಕಾರಕ್ಕೆ ಬಂತು. 2016ರ ವಿಧಾನಸಭೆ ಚುನಾವಣೆಯಲ್ಲೂ ಭರ್ಜರಿ ಜಯ ಗಳಿಸಿತು.

ಮಂಗಳವಾರ, ಮಾರ್ಚ್ 5, 2019

ಬಹುಜನರ ಅಭ್ಯುದಯ ಬಿಎಸ್ಪಿಯ ಧ್ಯೇಯ

ಹುಜನ ಸಮಾಜ ಪಾರ್ಟಿ(ಬಿಎಸ್‌ಪಿ)ಗೆ ರಾಷ್ಟ್ರೀಯ ಪಕ್ಷ ದ ಮಾನ್ಯತೆ ಇದ್ದರೂ ಉತ್ತರ ಪ್ರದೇಶದಲ್ಲೆ ಹೆಚ್ಚು ಅಸ್ತಿತ್ವವನ್ನು ಹೊಂದಿದೆ. ರಾಷ್ಟ್ರ ರಾಜಕಾರಣದಲ್ಲಿ ತನ್ನದೇ ಆದ ಪ್ರಾಮುಖ್ಯತೆಯನ್ನು ಹೊಂದಿದೆ. ಸಂದರ್ಭ ಎದುರಾದಗಲೆಲ್ಲ ಅದು ತನ್ನ ಸಾಮರ್ಥ್ಯವನ್ನು ಪ್ರದರ್ಶಿಸಿದೆ. ದೇಶದ ತಳಮಟ್ಟದ ಸಮುದಾಯ ಅಭಿವೃದ್ಧಿಯನ್ನು ಗುರಿಯಾಗಿಸಿಕೊಂಡು ಕಾನ್ಶಿ ರಾಮ್‌ ಅವರು 1984ರಲ್ಲಿ ಬಿಎಸ್‌ಪಿಯನ್ನು ಹುಟ್ಟು ಹಾಕಿದರು. ಬಹುಜನ ಅಂದರೆ ಬಹುಸಂಖ್ಯಾತರು ಎಂದರ್ಥ. ವಿಶೇಷವಾಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತರನ್ನು 'ಬಹುಜನ' ವ್ಯಾಪ್ತಿಯೊಳಗೆ ಸೇರಿದೆ. ಈ ವರ್ಗದ ಜನರ ಸಾಮಾಜಿಕ ಬದಲಾವಣೆ ಮತ್ತು ಆರ್ಥಿಕ ವಿಮೋಚನೆಯ ಬಿಎಸ್‌ಪಿ ಗುರಿ. 2014ರ ಲೋಕಸಭೆ ಚುನಾವಣೆಯಲ್ಲಿ ಬಿಎಸ್‌ಪಿ ಒಂದೂ ಸೀಟು ಗೆಲ್ಲದಿದ್ದರೂ ಮತಗಳಿಕೆಯ ಪ್ರಮಾಣದಲ್ಲಿ ದೇಶದ ಮೂರನೇ ಅತಿದೊಡ್ಡ ಪಕ್ಷ ವಾಗಿ ಹೊರಹೊಮ್ಮಿತ್ತು. ಜ್ಯೋತಿರಾವ್‌ ಫುಲೆ, ಅಂಬೇಡ್ಕರ್‌, ನಾರಾಯಣಗುರು, ಪೆರಿಯಾರ್‌ ಇ ವಿ ರಾಮಸ್ವಾಮಿ, ಛತ್ರಪತಿ ಶಾಹುಜಿ ಮಹಾರಾಜ ಅವರ ಸಿದ್ಧಾವಂತನ್ನು ಬಿಎಸ್‌ಪಿ ತನ್ನ ವಿಚಾಧಾರೆಯನ್ನಾಗಿಸಿಕೊಂಡಿದೆ. ಕಾನ್ಶಿ ರಾಮ್‌ ಅವರು ಬಿಎಸ್‌ಪಿಯನ್ನು ಬಹುಜನರ ಪಕ್ಷ ವಾಗಿ ರೂಪಿಸುವಲ್ಲಿ ಮಹತ್ತರ ಕಾಣಿಕೆಯನ್ನು ನೀಡಿದರು. ನಂತರ ಅವರು ತಮ್ಮ ಉತ್ತರಾಧಿಕಾರಿಯನ್ನಾಗಿ ಮಾಯಾವತಿಯನ್ನು 2001ರಲ್ಲಿ ನೇಮಕ ಮಾಡಿದರು. 2017ರ ಉತ್ತರ ಪ್ರದೇಶದ ವಿಧಾನಸಭೆ ಚುನಾವಣೆಯಲ್ಲಿ ಶೇ.22ರಷ್ಟು ಮತದೊಂದಿಗೆ 19 ಸ್ಥಾನಗಳನ್ನು ಗೆದ್ದಿತ್ತು. ಬಿಎಸ್‌ಪಿಗೆ ಪ್ರತ್ಯೇಕವಾದ ವಿದ್ಯಾರ್ಥಿ ವಿಭಾಗವಿಲ್ಲ. ಮಾಯಾವತಿಅವರು ಬಿಎಸ್‌ಪಿ ಸದ್ಯದ ವರ್ಚಸ್ವಿ ನಾಯಕಿ. ಮಾಯಾವತಿ ನಾಲ್ಕು ಬಾರಿ(1995, 1997 ಮತ್ತು 2000 - 2003, 2007-2012) ಬಿಎಸ್‌ಪಿಯನ್ನು ಉತ್ತರ ಪ್ರದೇಶದಲ್ಲಿ ಅಧಿಕಾರಕ್ಕೆ ತರುವಲ್ಲಿ ಯಶಸ್ವಿಯಾಗಿ, ಮುಖ್ಯಮಂತ್ರಿಯೂ ಆದರು. ಮಾಜಿ ಪ್ರಧಾನಿ ಪಿ.ವಿ.ನರಸಿಂಹರಾವ್‌ ಅವರು ಮಾಯಾವತಿ ಬೆಳವಣಿಗೆಯನ್ನು 'ಮಿರಾಕಲ್‌ ಆಫ್‌ ಡೆಮಾಕ್ರಷಿ'(ಪ್ರಜಾಪ್ರಭುತ್ವದ ಪವಾಡ) ಎಂದು ಬಣ್ಣಿಸಿದ್ದರು. ತಮ್ಮ ಕಾರ್ಯಕರ್ತರಿಂದ ಬೇಹನ್‌ಜೀ ಎಂದು ಕರೆಯಿಸಿಕೊಳ್ಳುವ ಮಾಯಾವತಿ ಪ್ರಧಾನಿ ಹುದ್ದೆ ಆಕಾಂಕ್ಷಿಯೂ ಹೌದು. ಪ್ರಸಕ್ತ ಚುನಾವಣೆಯಲ್ಲಿ ಅವರು ಎಸ್‌ಪಿ ಜತೆ ಮೈತ್ರಿ ಮಾಡಿಕೊಂಡು ಕಣಕ್ಕಿಳಿಯುತ್ತಿದೆ. ಆನೆಯು ಬಿಎಸ್‌ಪಿಯ ಚುನಾವಣಾ ಗುರುತು. 

ಈ ಲೇಖನವು ವಿಜಯ ಕರ್ನಾಟಕದಲ್ಲಿ ಪ್ರಕಟವಾಗಿದೆ

ಸೋಮವಾರ, ಮಾರ್ಚ್ 4, 2019

ಎಸ್‌ಪಿ ಜನತಾ ಪರಿವಾರದ ಮತ್ತೊಂದು ಟಿಸಿಲು

ಕಾಂಗ್ರೆಸ್‌ ಮತ್ತು ಬಿಜೆಪಿಯ ಹೊರತಾಗಿ ಸದ್ದು ಮಾಡುವ ಪ್ರಾದೇಶಿಕ ಪಕ್ಷ ಗಳ ಪೈಕಿ ಸಮಾಜವಾದಿ ಪಾರ್ಟಿ(ಎಸ್‌ಪಿ)ಯೂ ಒಂದು. ಉತ್ತರ ಪ್ರದೇಶದಲ್ಲಿ ಬುನಾದಿ ಹೊಂದಿರುವ ಎಸ್‌ಪಿ, ತನ್ನನ್ನು ತಾನು ಪ್ರಜಾಸತ್ತಾತ್ಮಕ ಸಮಾಜವಾದಿ ಪಕ್ಷ ಎಂದು ಹೇಳಿಕೊಳ್ಳುತ್ತದೆ. ಭಾರತದ ರಾಜಕಾರಣದಲ್ಲಿ ಉತ್ತರ ಪ್ರದೇಶಕ್ಕೆ ವಿಶೇಷ ಸ್ಥಾನವಿದೆ. ಯಾಕೆಂದರೆ, ಈ ರಾಜ್ಯವೊಂದೇ 80 ಸೀಟುಗಳನ್ನು ತನ್ನ ಮಡಿಲೊಳಗೆ ಇಟ್ಟುಕೊಂಡಿದೆ. ಹಾಗಾಗಿ, ತಮ್ಮದೇ ಆದ ಅಸ್ತಿತ್ವ ಹೊಂದಿರು ಎಸ್‌ಪಿ, ಬಿಎಸ್‌ಪಿ ಕೇಂದ್ರದಲ್ಲಿ ಸಮ್ಮಿಶ್ರ ಸರಕಾರಗಳು ರಚನೆಯಾದಾಗಲೆಲ್ಲ ಪ್ರಮುಖ ಪಾತ್ರ ನಿರ್ವಹಿಸಿವೆ. 2019ರ ಚುನಾವಣೆಯಲ್ಲೂ ಉಭಯ ಪಕ್ಷ ಗಳು ಮೈತ್ರಿಯೊಂದಿಗೆ ಕಣಕ್ಕಿಳಿಯುತ್ತಿರುವುದು ಇದಕ್ಕೆ ಸಾಕ್ಷಿ. ಜಯಪ್ರಕಾಶ್‌ ನಾರಾಯಣ್‌ ಅವರ ಚಳವಳಿಯಿಂದ ಉದಯಿಸಿದ್ದ ಜನತಾ ಪಾರ್ಟಿ ಮೂರು ವರ್ಷದ ಅಧಿಕಾರದ ಬಳಿಕ ಛಿದ್ರವಾಗಿ ಹೋಯಿತು. ಆಗ ಅನೇಕ ಪಕ್ಷ ಗಳು ತಲೆ ಎತ್ತಿದವು. ಆ ಪೈಕಿ ಎಸ್‌ಪಿಯೂ ಒಂದು. ತಮ್ಮ ಕಾರ್ಯಕರ್ತರಿಂದ ಪ್ರೀತಿಯಿಂದ 'ನೇತಾಜಿ' ಎಂದು ಕರೆಯಿಸಿಕೊಳ್ಳುವ ಮುಲಾಯಂ ಸಿಂಗ್‌ ಯಾದವ್‌ ಉತ್ತರ ಪ್ರದೇಶದಲ್ಲಿ ಪಕ್ಷ ವನ್ನು ಸಂಘಟಿಸಿ ಅದನ್ನು ಅಧಿಕಾರದವರೆಗೂ ಕೊಂಡೊಯ್ದರು. ನಾಲ್ಕು ಬಾರಿ ಬೇರೆ ಪಕ್ಷ ಗಳ ನೆರವಿನೊಂದಿಗೆ ಉತ್ತರ ಪ್ರದೇಶದಲ್ಲಿ ಅಧಿಕಾರಕ್ಕೂ ಬಂದರು. ಹಾಗೆಯೇ, ದೇವೇಗೌಡ ಮತ್ತು ಐ.ಕೆ.ಗುಜ್ರಾಲ್‌ ನೇತೃತ್ವದ ಕೇಂದ್ರ ಸರಕಾರದಲ್ಲೂ ಎಸ್‌ಪಿ ಪ್ರಮುಖ ಪಾತ್ರ ನಿರ್ವಹಿಸಿತ್ತು. 2012ರ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಎಲ್ಲರ ನಿರೀಕ್ಷೆ ಹುಸಿಗೊಳಿಸಿದ ಎಸ್‌ಪಿ, ಪ್ರಚಂಡ ಬಹುಮತದೊಂದಿಗೆ ಅಧಿಕಾರಕ್ಕೆ ಬಂತು. ಈ ಬಾರಿಯೂ ನೇತಾಜಿ ಸಿಎಂ ಆಗುತ್ತಾರೆಂದು ಎಲ್ಲರೂ ಭಾವಿಸಿದ್ದರು. ಆದರೆ, ಮುಲಾಯಂ ಸಿಂಗ್‌ ಅವರು ತಮ್ಮ ಪುತ್ರ ಅಖಿಲೇಶ್‌ ಸಿಂಗ್‌ ಯಾದವರ್‌ ಅವರಿಗೆ ಪಟ್ಟ ಕಟ್ಟಿ ಮುಖ್ಯಮಂತ್ರಿ ಮಾಡಿದರು. ಅಂದ ಹಾಗೆ, ಮೊದಲ ಬಾರಿಗೆ ಎಸ್‌ಪಿ ಐದು ವರ್ಷಗಳ ಪೂರ್ತಿ ಉತ್ತರ ಪ್ರದೇಶದಲ್ಲಿ ಅಧಿಕಾರ ಚಲಾಯಿಸಿತು. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಜತೆ ಮೈತ್ರಿ ಮಾಡಿಕೊಳ್ಳುವ ಸಂಬಂಧ ಎಸ್‌ಪಿಯೊಳಗೇ ದೊಡ್ಡ ಮಟ್ಟದ ಕೋಲಾಹಲ ಕೂಡ ನಡೆಯಿತು. ಸೈದ್ಧಾಂತಿಕವಾಗಿ ಎಸ್‌ಪಿ ಜಾತ್ಯತೀತ, ಸಮಾಜವಾದ, ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ಪ್ರತಿಪಾದಿಸುತ್ತದೆ. ಎಸ್‌ಪಿ ಚುನಾವಣಾ ಗುರುತು ಸೈಕಲ್‌. ಅಖಿಲೇಶ್‌ ಸಿಂಗ್‌ ಯಾದವ್‌ ಈಗ ಪಕ್ಷ ವನ್ನು ಮುನ್ನಡೆಸುತ್ತಿದ್ದಾರೆ. 

ಈ ಲೇಖನವು ವಿಜಯಕರ್ನಾಟಕದಲ್ಲಿ ಪ್ರಕಟವಾಗಿದೆ. ಲಿಂಕ್ ಮೇಲೆ ಕ್ಲಿಕ್ ಮಾಡಿ.

ಎಡ ರಾಜಕಾರಣದ ಮುಂಚೂಣಿ ಪಕ್ಷ ಸಿಪಿಐ

ಮ್ಯುನಿಸ್ಟ್‌ ಪಾರ್ಟಿ ಇಂಡಿಯಾ(ಸಿಪಿಐ) ಭಾರತೀಯ ರಾಜಕಾರಣದಲ್ಲಿ ತನ್ನದೇ ವಿಶಿಷ್ಟ ಸ್ಥಾನವನ್ನು ಹೊಂದಿದೆ. ಭಾರತದಲ್ಲಿ ಸಿಪಿಐ ಯಾವಾಗ ಆರಂಭವಾಯಿತು ಎಂಬುದರ ಬಗ್ಗೆ ನಿಖರ ಮಾಹಿತಿ ಇಲ್ಲವಾದರೂ 1925 ಡಿಸೆಂಬರ್‌ 26ರಂದು ಹೇಳಲಾಗುತ್ತದೆ. ಹಾಗೆಯೇ ಪ್ರತಿ ವರ್ಷ 26ರಂದು ಸಂಸ್ಥಾಪನಾ ದಿನವನ್ನು ಆಚರಿಸಲಾಗುತ್ತದೆ. ಸ್ವಾತಂತ್ರ್ಯಪೂರ್ವದಿಂದಲೂ ಎಡಪಕ್ಷ ಗಳು ಭಾರತದಲ್ಲಿ ತಮ್ಮ ಅಸ್ತಿತ್ವವನ್ನು ಹೊಂದಿದ್ದರೂ ಅವುಗಳ ಪ್ರಾಮುಖ್ಯತೆ ಸ್ವಾತಂತ್ರ್ಯದ ನಂತರವೇ ಹೆಚ್ಚು ಎದ್ದು ಕಂಡಿತು. ಎಡಪಂಥೀಯ ವಿಚಾರಧಾರೆ ನಮ್ಮ ನೆಲದ್ದಲ್ಲ. ಹಾಗಾಗಿ, ಚೀನಾ ಮತ್ತು ಸೋವಿಯತ್‌ ರಷ್ಯಾ ನಡುವಿನ ಸೈದ್ಧಾಂತಿಕ ಭಿನ್ನಾಭಿಪ್ರಾಯವು ಭಾರತದಲ್ಲಿನ ಎಡಪಕ್ಷ ದ ಮೇಲೂ ಪರಿಣಾಮ ಬೀರಿ, 1964ರಲ್ಲಿ ಸಿಪಿಐ ಇಬ್ಭಾಗವಾಯಿತು. ಸಿಪಿಐ(ಮಾರ್ಕ್ಸ್‌ವಾದ) ಪ್ರತ್ಯೇಕವಾಗಿ ಪಕ್ಷ ದ ಸ್ಥಾನಮಾನ ಪಡೆದುಕೊಂಡಿತು. ಎಸ್‌.ಸುಧಾಕರ ರೆಡ್ಡಿ ಸಿಪಿಐನ ಪ್ರಸಕ್ತ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ತ್ರಿಪುರಾ, ಪಶ್ಚಿಮ ಬಂಗಾಳ ಮತ್ತು ಕೇರಳ ರಾಜ್ಯಗಳಲ್ಲಿ ಎಡಪಕ್ಷ ಗಳ ಜತೆ ಸಿಪಿಐ ಅಧಿಕಾರದಲ್ಲಿತ್ತು. ಕೇರಳದಲ್ಲಿ 19, ಪಶ್ಚಿಮ ಬಂಗಾಳದಲ್ಲಿ ಒಬ್ಬರು ವಿಧಾನಸಭೆ ಸದಸ್ಯರಿದ್ದಾರೆ. ಲೋಕಸಭೆಯಲ್ಲಿ ಒಬ್ಬ ಹಾಗೂ ರಾಜ್ಯಸಭೆಯಲ್ಲಿ ಇಬ್ಬರು ಪ್ರತಿನಿಧಿಗಳಿದ್ದಾರೆ.ಘ್ಕಿ ಆರಂಭಿಕ ಸಾರ್ವತ್ರಿಕ ಚುನಾವಣೆಗಳಲ್ಲಿ ಕಾಂಗ್ರೆಸ್‌ ನಂತರ ಅತ್ಯುತ್ತಮ ಪ್ರದರ್ಶನ ತೋರಿದ ಪಕ್ಷ ಎಂದರೆ ಸಿಪಿಐ ಮಾತ್ರ. ಭಾರತದಲ್ಲೂ ಈಗಲೂ ಕಮ್ಯುನಿಸ್ಟ್‌ ಪಾರ್ಟಿಗೆ ಫಾಲೋ ಮಾಡುವ ಅಸಂಖ್ಯೆ ಜನರಿದ್ದಾರೆ. ಆದರೆ, ಅವರನ್ನು ಮುನ್ನಡೆಸಬಲ್ಲ ಸರ್ವ ಒಪ್ಪಿಗೆಯಾಗಬಲ್ಲ ನಾಯಕತ್ವದ ಕೊರತೆ ಇದೆ. ಇಡೀ ದೇಶವನ್ನು ಪ್ರಭಾವಿಸಬಲ್ಲ ನಾಯಕರು ಎಡಪಕ್ಷ ಗಳಿಂದ ಹೊರಬೀಳಲಿಲ್ಲ. ಹಾಗಾಗಿ, ಸಿಪಿಐ 1960ರ ದಶಕದ ನಂತರ, ಮೇಲ್ಮುಖದ ಬೆಳವಣಿಗೆಯನ್ನು ಕಾಣಲೇ ಇಲ್ಲ. ಸಿಪಿಐನಿಂದ ಛಿದ್ರವಾಗಿ ಹೊರಹೋಗಿದ್ದ ಸಿಪಿಎಂ ತುಸು ಬೆಳವಣಿಗೆಯನ್ನು ಕಂಡಿತಾದರೂ ಅದು ಕೂಡ ಇತ್ತೀಚಿನ ವರ್ಷಗಳಲ್ಲಿ ನೆಲಕಚ್ಚುತ್ತಾ ಬಂದಿದೆ. ಬಿಜೆಪಿ ಮತ್ತು ಕಾಂಗ್ರೆಸ್‌ಗೆ ಪರ್ಯಾಯವಾದ ರಾಜಕಾರಣವನ್ನು ಕಟ್ಟಿ ಬೆಳೆಸುವ ಸಾಮರ್ಥ್ಯ ಇದ್ದರೂ ಅದನ್ನು ಹೊಣೆ ಹೊತ್ತು ಕೊಳ್ಳುವ ನಾಯಕರಿಲ್ಲ ಎಂಬುದು ರಾಜಕೀಯ ವಿಶ್ಲೇಷಕರ ಅಭಿಪ್ರಾಯ. 

ವಿಜಯ ಕರ್ನಾಟಕದಲ್ಲಿ ಈ ಲೇಖನ ಪ್ರಕಟವಾಗಿದೆ. ಲಿಂಕ್ ಮೇಲೆ ಕ್ಲಿಕ್ಮ ಮಾಡಿ
https://vijaykarnataka.indiatimes.com/elections/lok-sabha/news/a-history-of-communist-party-of-india-cpi/articleshow/68232805.cms

ಯಶಸ್ಸಿನ ಹಾದಿಯಲ್ಲಿ ಬಿಜೆಪಿ

ಬಿಜೆಪಿ ಸದ್ಯ ಗೆಲುವಿನ ಅಶ್ವ ಏರಿ ಶರವೇಗದಲ್ಲಿ ಸಾಗುತ್ತಿರುವ ಪಕ್ಷ . ಕಾಂಗ್ರೆಸ್‌ಗೆ ಪರ್ಯಾಯ ಮತ್ತು ಬಲಿಷ್ಠ ರಾಜಕೀಯ ವ್ಯವಸ್ಥೆಯನ್ನು ರೂಪಿಸಿದ ಹೆಗ್ಗಳಿಕೆ ಬಿಜೆಪಿಗೆ ಸಲ್ಲುತ್ತದೆ. ಬಿಜೆಪಿಯ ಮೂಲ ಭಾರತೀಯ ಜನ ಸಂಘ ಪಕ್ಷ ದಲ್ಲಿದೆ. ಶ್ಯಾಮ ಪ್ರಸಾದ್‌ ಮುಖರ್ಜಿ ಅವರು 1951ರಲ್ಲಿ ಬಿಜೆಎಸ್‌ ಸ್ಥಾಪಿಸಿದರು. 1977ರ ನಂತರ ಬಿಜೆಎಸ್‌ ಅನ್ನು ಜನತಾ ಪರಿವಾರದೊಂದಿಗೆ ವಿಲೀನ ಮಾಡಲಾಯಿತು. ಮೂರು ವರ್ಷದ ಬಳಿಕ ಜನತಾ ಪರಿವಾರ ಛಿದ್ರವಾಗಿ, ಭಾರತೀಯ ಜನಸಂಘವು ಭಾರತೀಯ ಜನತಾ ಪಾರ್ಟಿಯಾಗಿ ಮರುಜನ್ಮ ಪಡೆದುಕೊಂಡಿತು. ಆರಂಭದಲ್ಲಿ ಅಂಥ ಹೇಳಿಕೊಳ್ಳುವ ಯಶಸ್ಸು ದೊರೆಯಲಿಲ್ಲ. 1984ರ ಚುನಾವಣೆಯಲ್ಲಿ ಕೇವಲ 2 ಸ್ಥಾನಗಳನ್ನು ಮಾತ್ರ ಗೆದ್ದಿತ್ತು. ಆದರೆ, ನಂತರದ ದಿನಗಳಲ್ಲಿ ರಾಮಜನ್ಮಭೂಮಿ ವಿವಾದ ಬಿಜೆಪಿಯ ರಾಜಕಾರಣಕ್ಕೆ ಹೊಸದಿಕ್ಕನ್ನೇ ತೋರಿಸಿತು. ನಿಧಾನವಾಗಿ ರಾಜ್ಯಗಳಲ್ಲಿ ತನ್ನ ಬೇರುಗಳನ್ನು ಚಾಚುತ್ತಾ, ಕೇಂದ್ರ ಮಟ್ಟದಲ್ಲಿ ಗಣನೀಯವಾಗಿ ತನ್ನ ಸೀಟುಗಳನ್ನು ಹೆಚ್ಚಿಸಿಕೊಳ್ಳುತ್ತಾ ಹೋಯಿತು. ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಮತ್ತು ಎಲ್‌.ಕೆ. ಆಡ್ವಾಣಿಅವರು ಬಿಜೆಪಿಗೆ ಸಮರ್ಥ ನಾಯಕತ್ವ ಒದಗಿಸಿದರು. 1996ರ ಚುನಾವಣೆಯಲ್ಲಿ ಅತಿದೊಡ್ಡ ಪಕ್ಷ ವಾಗಿ ಹೊರಹೊಮ್ಮಿ ವಾಜಪೇಯಿ ನೇತೃತ್ವದಲ್ಲಿ ಸರಕಾರ ರಚಿಸಿತು. ಆದರೆ, ಬಹುಮತ ಕೊರತೆಯಿಂದ 13 ದಿನದಲ್ಲಿ ಪತನ ಕಂಡಿತು. 1998ರಲ್ಲಿ ನಡೆದ ಮಧ್ಯಂತರ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಬಹುಮತದೊಂದಿಗೆ ಅಧಿಕಾರಕ್ಕೇರಿತು. 2014ರಲ್ಲಿ ಮೋದಿ ನೇತೃತ್ವದಲ್ಲಿ ಪ್ರಚಂಡ ಬಹುಮತದೊಂದಿಗೆ ಮತ್ತೆ ಅಧಿಕಾರದಲ್ಲಿರುವ ಬಿಜೆಪಿ, ಅತಿ ಹೆಚ್ಚು ಕಾರ್ಯಕರ್ತರನ್ನು ಹೊಂದಿದೆ ಪಕ್ಷ ಎಂಬ ಹೆಗ್ಗಳಿಕೆ ಇದೆ. ಸದ್ಯ 10 ರಾಜ್ಯಗಳಲ್ಲಿ ಬಿಜೆಪಿ ನೇರವಾಗಿ ಅಧಿಕಾರದಲ್ಲಿದ್ದರೆ, 7 ರಾಜ್ಯಗಳಲ್ಲಿ ಬಿಜೆಪಿ ಮೈತ್ರಿ ಸರಕಾರಗಳಿವೆ. ಬಲಪಂಥೀಯ ವಿಚಾರಧಾರೆ ಹೊಂದಿರು ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ರಾಗಿ ಅಮಿತ್‌ ಶಾ ಕಾರ್ಯನಿರ್ವಹಿಸುತ್ತಿದ್ದಾರೆ. 

ವಿಜಯ ಕರ್ನಾಟಕದಲ್ಲಿ ಈ ಲೇಖನ ಪ್ರಕಟವಾಗಿದೆ. ಲಿಂಕ್ ಮೇಲೆ ಕ್ಲಿಕ್ ಮಾಡಿ.
https://vijaykarnataka.indiatimes.com/elections/lok-sabha/news/bjp-party-history/articleshow/68219784.cms