ಗುರುವಾರ, ಮಾರ್ಚ್ 7, 2019

ಕಾಂಗ್ರೆಸೇತರ ಮೊದಲ ಸರಕಾರ ರಚನೆ

ಭಾರತೀಯ ರಾಜಕಾರಣದಲ್ಲಿ ಏಕಮೇವಾದ್ವಿತೀಯವಾಗಿ ಮೆರೆಯುತ್ತಿದ್ದ ಕಾಂಗ್ರೆಸ್‌ಗೆ ಬಲವಾದ ಪೆಟ್ಟು ನೀಡಿದ ಚುನಾವಣೆ ಇದು. ಸ್ವತಂತ್ರ ಭಾರತದಲ್ಲಿ ಮೊದಲ ಬಾರಿಗೆ ಪ್ರತಿಪಕ್ಷ ಗಳೆಲ್ಲವೂ ಒಗ್ಗೂಡಿ, ಕಾಂಗ್ರೆಸ್‌ ಅನ್ನು ಹೀನಾಯವಾಗಿ ಸೋಲಿಸಿದವು. ವಾಸ್ತವದಲ್ಲಿ 1975ರಲ್ಲಿ ಚುನಾವಣೆ ನಡೆಯಬೇಕಿತ್ತು. ಆದರೆ, ಇಂದಿರಾ ಗಾಂಧಿ ತುರ್ತು ಪರಿಸ್ಥಿತಿ ಘೋಷಿಸಿ, ಚುನಾವಣೆಯನ್ನು ಎರಡು ವರ್ಷದವರೆಗೂ ಮುಂದೂಡಿದರು. ಕರಾಳ ತುರ್ತು ಪರಿಸ್ಥಿತಿಯನ್ನು ಅನುಭವಿಸಿದ್ದ ಜನ 1977ರ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ತಕ್ಕ ಪಾಠ ಕಲಿಸಿ, ಅದರ ಗರ್ವವನ್ನು ತೊಡೆದು ಹಾಕಿದರು. ಈ ಚುನಾವಣೆಯಲ್ಲಿ ಜನತಾ ಪಾರ್ಟಿ ನೇತೃತ್ವದಲ್ಲಿ ಸಿಪಿಎಂ, ಎಸ್‌ಎಡಿ, ಪಿಡಬ್ಲ್ಯೂಪಿಐ, ಆರ್‌ಎಸ್‌ಪಿ, ಎಐಎಫ್‌ಬಿ, ಆರ್‌ಪಿಐ, ಡಿಎಂಕೆ ಕೂಟ ರಚಿಸಿಕೊಂಡವು. ಇನ್ನು ಕಾಂಗ್ರೆಸ್‌ ನೇತೃತ್ವದ ಕೂಟದಲ್ಲಿ ಎಐಎಡಿಎಂಕೆ, ಸಿಪಿಐ, ಮುಸ್ಲಿಮ್‌ ಲೀಗ್‌, ಕೇರಳ ಕಾಂಗ್ರೆಸ್‌ ಇದ್ದವು. ಜನತಾ ಪಾರ್ಟಿ ಒಟ್ಟು 298 ಸ್ಥಾನಗಳನ್ನು ಗೆದ್ದರೆ, ಕಾಂಗ್ರೆಸ್‌ 153 ಸ್ಥಾನಗಳನ್ನು ಗೆಲ್ಲಲು ಮಾತ್ರ ಸಾಧ್ಯವಾಯಿತು. ಜನತಾ ಪರಿವಾರದ ನಾಯಕರಾಗಿ ಮೊರಾರ್ಜಿ ದೇಸಾಯಿಅವರನ್ನು ಆಯ್ಕೆ ಮಾಡಲಾಯಿತು. ಅವರು ಕಾಂಗ್ರೆಸೇತರ ಮೊದಲ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದರು. ವಿಶೇಷ ಎಂದರೆ, ಈ ಚುನಾವಣೆ ನಡೆದಿದ್ದೇ ಡೆಮಾಕ್ರಷಿ ಅಥವಾ ಡಿಕ್ಟಟರ್‌ಶಿಫ್‌(ಜನತಂತ್ರ ಅಥವಾ ಸರ್ವಾಧಿಕಾರ) ಎಂಬ ಸೈದ್ಧಾಂತಿಕ ನೆಲೆಯಲ್ಲಿ. ಕಾಂಗ್ರೆಸ್‌ ವಿರೋಧಿ ನೆಲೆಯಲ್ಲಿ ಒಂದಾಗಿ ಸರಕಾರ ರಚಿಸಿದ್ದ ಜನತಾ ಪರಿವಾರ, 1979ರಲ್ಲಿ ಒಡೆದ ಮನೆಯಾಯಿತು. ಇದರಿಂದ ಅನಿವಾರ್ಯವಾಗಿ ಮೊರಾರ್ಜಿ ದೇಸಾಯಿ ಅಧಿಕಾರದಿಂದ ಕೆಳಗಿಳಿಯಬೇಕಾಯಿತು. ಬಳಿಕ ಕಾಂಗ್ರೆಸ್‌ ಬೆಂಬಲದೊಂದಿಗೆ ಚರಣ್‌ ಸಿಂಗ್‌ ಅವರು ಪ್ರಧಾನಿಯಾದರು! ಸರ್ವಾಧಿಕಾರ, ಪ್ರಜಾತಂತ್ರ, ಸಂವಿಧಾನ ರಕ್ಷ ಣೆ ಹೆಸರಿನಲ್ಲಿ ನಡೆದ ಈ ಚುನಾವಣೆಯ ಅನೇಕ ಅವಕಾಶಗಳನ್ನು ಸೃಷ್ಟಿಸಿತು. ಆದರೆ, ಅಂಥ ಅವಕಾಶಗಳನ್ನು ಬಳಸಿಕೊಳ್ಳಲು ನಾಯಕರು ಮಾತ್ರ ವಿಫಲರಾದರು. ಕಾಂಗ್ರೆಸ್‌ಗೆ ಪರ್ಯಾಯ ರಾಜಕಾರಣ ಕನಸು ಕಾಣುವಂತೆ ಮಾಡಿದ್ದ ಜನತಾ ಪಾರ್ಟಿ ಅಧಿಕಾರಕ್ಕೆ ಕಚ್ಚಾಡಿಕೊಂಡಿದ್ದು ರಾಜಕೀಯ ಪ್ರಮಾದ ಎಂಬುದು ಮುಂಬರುವ ದಿನಗಳಲ್ಲಿ ಎಲ್ಲ ಭಾರತೀಯರ ಅನುಭವಕ್ಕೆ ಬಂತು. ವಿಶೇಷ ಎಂದರೆ, ತುರ್ತು ಪರಿಸ್ಥಿತಿ ವಿರೋಧಿಸಿ ಮತ ನೀಡಿದ್ದ ಭಾರತೀಯರು ನಂತರದ ಚುನಾವಣೆಯಲ್ಲಿ ಕಾಂಗ್ರೆಸ್‌ ಬಹುಮತ ನೀಡಿ ಮತ್ತೆ ಅಧಿಕಾರಕ್ಕೆ ತಂದರು.   - ತಿಪ್ಪಾರ 

ಮಂಗಳವಾರ, ಮಾರ್ಚ್ 5, 2019

ಬಹುಜನರ ಅಭ್ಯುದಯ ಬಿಎಸ್ಪಿಯ ಧ್ಯೇಯ

ಹುಜನ ಸಮಾಜ ಪಾರ್ಟಿ(ಬಿಎಸ್‌ಪಿ)ಗೆ ರಾಷ್ಟ್ರೀಯ ಪಕ್ಷ ದ ಮಾನ್ಯತೆ ಇದ್ದರೂ ಉತ್ತರ ಪ್ರದೇಶದಲ್ಲೆ ಹೆಚ್ಚು ಅಸ್ತಿತ್ವವನ್ನು ಹೊಂದಿದೆ. ರಾಷ್ಟ್ರ ರಾಜಕಾರಣದಲ್ಲಿ ತನ್ನದೇ ಆದ ಪ್ರಾಮುಖ್ಯತೆಯನ್ನು ಹೊಂದಿದೆ. ಸಂದರ್ಭ ಎದುರಾದಗಲೆಲ್ಲ ಅದು ತನ್ನ ಸಾಮರ್ಥ್ಯವನ್ನು ಪ್ರದರ್ಶಿಸಿದೆ. ದೇಶದ ತಳಮಟ್ಟದ ಸಮುದಾಯ ಅಭಿವೃದ್ಧಿಯನ್ನು ಗುರಿಯಾಗಿಸಿಕೊಂಡು ಕಾನ್ಶಿ ರಾಮ್‌ ಅವರು 1984ರಲ್ಲಿ ಬಿಎಸ್‌ಪಿಯನ್ನು ಹುಟ್ಟು ಹಾಕಿದರು. ಬಹುಜನ ಅಂದರೆ ಬಹುಸಂಖ್ಯಾತರು ಎಂದರ್ಥ. ವಿಶೇಷವಾಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತರನ್ನು 'ಬಹುಜನ' ವ್ಯಾಪ್ತಿಯೊಳಗೆ ಸೇರಿದೆ. ಈ ವರ್ಗದ ಜನರ ಸಾಮಾಜಿಕ ಬದಲಾವಣೆ ಮತ್ತು ಆರ್ಥಿಕ ವಿಮೋಚನೆಯ ಬಿಎಸ್‌ಪಿ ಗುರಿ. 2014ರ ಲೋಕಸಭೆ ಚುನಾವಣೆಯಲ್ಲಿ ಬಿಎಸ್‌ಪಿ ಒಂದೂ ಸೀಟು ಗೆಲ್ಲದಿದ್ದರೂ ಮತಗಳಿಕೆಯ ಪ್ರಮಾಣದಲ್ಲಿ ದೇಶದ ಮೂರನೇ ಅತಿದೊಡ್ಡ ಪಕ್ಷ ವಾಗಿ ಹೊರಹೊಮ್ಮಿತ್ತು. ಜ್ಯೋತಿರಾವ್‌ ಫುಲೆ, ಅಂಬೇಡ್ಕರ್‌, ನಾರಾಯಣಗುರು, ಪೆರಿಯಾರ್‌ ಇ ವಿ ರಾಮಸ್ವಾಮಿ, ಛತ್ರಪತಿ ಶಾಹುಜಿ ಮಹಾರಾಜ ಅವರ ಸಿದ್ಧಾವಂತನ್ನು ಬಿಎಸ್‌ಪಿ ತನ್ನ ವಿಚಾಧಾರೆಯನ್ನಾಗಿಸಿಕೊಂಡಿದೆ. ಕಾನ್ಶಿ ರಾಮ್‌ ಅವರು ಬಿಎಸ್‌ಪಿಯನ್ನು ಬಹುಜನರ ಪಕ್ಷ ವಾಗಿ ರೂಪಿಸುವಲ್ಲಿ ಮಹತ್ತರ ಕಾಣಿಕೆಯನ್ನು ನೀಡಿದರು. ನಂತರ ಅವರು ತಮ್ಮ ಉತ್ತರಾಧಿಕಾರಿಯನ್ನಾಗಿ ಮಾಯಾವತಿಯನ್ನು 2001ರಲ್ಲಿ ನೇಮಕ ಮಾಡಿದರು. 2017ರ ಉತ್ತರ ಪ್ರದೇಶದ ವಿಧಾನಸಭೆ ಚುನಾವಣೆಯಲ್ಲಿ ಶೇ.22ರಷ್ಟು ಮತದೊಂದಿಗೆ 19 ಸ್ಥಾನಗಳನ್ನು ಗೆದ್ದಿತ್ತು. ಬಿಎಸ್‌ಪಿಗೆ ಪ್ರತ್ಯೇಕವಾದ ವಿದ್ಯಾರ್ಥಿ ವಿಭಾಗವಿಲ್ಲ. ಮಾಯಾವತಿಅವರು ಬಿಎಸ್‌ಪಿ ಸದ್ಯದ ವರ್ಚಸ್ವಿ ನಾಯಕಿ. ಮಾಯಾವತಿ ನಾಲ್ಕು ಬಾರಿ(1995, 1997 ಮತ್ತು 2000 - 2003, 2007-2012) ಬಿಎಸ್‌ಪಿಯನ್ನು ಉತ್ತರ ಪ್ರದೇಶದಲ್ಲಿ ಅಧಿಕಾರಕ್ಕೆ ತರುವಲ್ಲಿ ಯಶಸ್ವಿಯಾಗಿ, ಮುಖ್ಯಮಂತ್ರಿಯೂ ಆದರು. ಮಾಜಿ ಪ್ರಧಾನಿ ಪಿ.ವಿ.ನರಸಿಂಹರಾವ್‌ ಅವರು ಮಾಯಾವತಿ ಬೆಳವಣಿಗೆಯನ್ನು 'ಮಿರಾಕಲ್‌ ಆಫ್‌ ಡೆಮಾಕ್ರಷಿ'(ಪ್ರಜಾಪ್ರಭುತ್ವದ ಪವಾಡ) ಎಂದು ಬಣ್ಣಿಸಿದ್ದರು. ತಮ್ಮ ಕಾರ್ಯಕರ್ತರಿಂದ ಬೇಹನ್‌ಜೀ ಎಂದು ಕರೆಯಿಸಿಕೊಳ್ಳುವ ಮಾಯಾವತಿ ಪ್ರಧಾನಿ ಹುದ್ದೆ ಆಕಾಂಕ್ಷಿಯೂ ಹೌದು. ಪ್ರಸಕ್ತ ಚುನಾವಣೆಯಲ್ಲಿ ಅವರು ಎಸ್‌ಪಿ ಜತೆ ಮೈತ್ರಿ ಮಾಡಿಕೊಂಡು ಕಣಕ್ಕಿಳಿಯುತ್ತಿದೆ. ಆನೆಯು ಬಿಎಸ್‌ಪಿಯ ಚುನಾವಣಾ ಗುರುತು. 

ಈ ಲೇಖನವು ವಿಜಯ ಕರ್ನಾಟಕದಲ್ಲಿ ಪ್ರಕಟವಾಗಿದೆ

ಹೊಸ ರಾಜಕಾರಣ ಬಿತ್ತಿದ 5ನೇ ಚುನಾವಣೆ

ಭಾರತೀಯ ರಾಜಕಾರಣದಲ್ಲಿ 1971ರ ಚುನಾವಣೆ ಭಾರೀ ಬದಲಾವಣೆಗೆ ಕಾರಣವಾಯಿತು. ಇಂದಿರಾ ಗಾಂಧಿ ಮೂರನೇ ಅವಧಿಗೆ ಪ್ರಧಾನಿಯಾದರೆ, ಅವಧಿ ಪೂರ್ಣಗೊಂಡರೂ ಚುನಾವಣೆ ನಡೆಸದೇ ತುರ್ತುಪರಿಸ್ಥಿತಿ ಹೇರಿ, ಹೊಸ ರಾಜಕೀಯ ಮನ್ವಂತರಕ್ಕೆ ಹಾದಿ ತೋರಿಸಿದರು; ಹೊಸ ನಾಯಕರು ಉದಯಿಸಿದರು. ರಾಜಕಾರಣದ ಹೊಸ ಸಮೀಕರಣವನ್ನು ಮುಂದಿನ ವರ್ಷಗಳಲ್ಲಿ ಕಾಣಬೇಕಾಯಿತು. ನಾಲ್ಕನೇ ಚುನಾವಣೆಯಲ್ಲಿ ಕಳಪೆ ಪ್ರದರ್ಶನ ತೋರಿದ್ದ ಕಾಂಗ್ರೆಸ್‌, 5ನೇ ಸಾರ್ವತ್ರಿಕ ಚುನಾವಣೆಯಲ್ಲಿ ಭರ್ಜರಿ ಬ್ಯಾಟಿಂಗ್‌ ಮಾಡಿತು. ಈ ಚುನಾವಣೆ ಹೊತ್ತಿಗೆ ಕಾಂಗ್ರೆಸ್‌ ಒಡೆದ ಮನೆಯಾಗಿ, ಮೊರಾರ್ಜಿ ದೇಸಾಯಿನೇತೃತ್ವದ ಕಾಂಗ್ರೆಸ್‌ ಕೂಡ ಸ್ಪರ್ಧೆಯೊಡ್ಡಿತ್ತು. ಇಂದಿರಾ ನೇತೃತ್ವದ ಕಾಂಗ್ರೆಸ್‌ 518 ಕ್ಷೇತ್ರಗಳ ಪೈಕಿ 352 ಕ್ಷೇತ್ರಗಳನ್ನು ಗೆದ್ದುಕೊಂಡಿತು. ದೇಸಾಯಿ ನೇತೃತ್ವದ ಕಾಂಗ್ರೆಸ್‌ ಕೇವಲ 16 ಸ್ಥಾನಗಳನ್ನು ಮಾತ್ರ ಗೆಲ್ಲಲು ಸಾಧ್ಯವಾಯಿತು. ಸಿಪಿಎಂ 25, ಸಿಪಿಐ 23 ಹಾಗೂ ಜನಸಂಘ 22, ಡಿಎಂಕೆ 23 ಸ್ಥಾನಗಳನ್ನು ಗೆದ್ದುಕೊಂಡವು. ಸ್ವತಂತ್ರಪಾರ್ಟಿ ಮಾತ್ರ ಇನ್ನಿಲ್ಲದಂತೆ ನೆಲಕಚ್ಚಿತು. ಈ ಹಿಂದಿನ ಅವಧಿಯಲ್ಲಿ ಇಂದಿರಾ ಗಾಂಧಿ ಮತ್ತು ಮೊರಾರ್ಜಿ ದೇಸಾಯಿ ಮಧ್ಯೆ ಕಾಂಗ್ರೆಸ್‌ ಒಡೆದು ಹೋಗಿತ್ತು. ಇಂದಿರಾ ಅವರನ್ನು ಪಕ್ಷ ದಿಂದ ಹೊರ ಹಾಕಲಾಗಿತ್ತು. ಆದರೆ, ಬಹುತೇಕ ಸಂಸದರು ಮತ್ತು ಕಾರ್ಯಕರ್ತರು ಇಂದಿರಾಗೆ ಸಪೋರ್ಟ್‌ ಮಾಡಿದ್ದರು. ಹಾಗಾಗಿ, ಚುನಾವಣಾ ಆಯೋಗ ಕೂಡ ಇಂದಿರಾ ಕಾಂಗ್ರೆಸ್‌ಗೆ ಮಾನ್ಯತೆ ನೀಡಿತ್ತು. ಇಂದಿರಾ ವಿರೋಧಿಸಿದ್ದ 31 ಸಂಸದರು ಇಂಡಿಯನ್‌ ನ್ಯಾಷನಲ್‌ ಕಾಂಗ್ರೆಸ್‌(ಆರ್ಗನೈಷನ್‌) ಅಡಿ ಗುರುತಿಸಿಕೊಂಡಿದ್ದರು. ಈ ಒಳ ಜಗಳದ ಹೊರತಾಗಿಯೂ, ಇಂದಿರಾ ಪ್ರಭಾವಳಿಯಿಂದ ಕಾಂಗ್ರೆಸ್‌ ಅಧಿಕಾರಕ್ಕೆ ಬಂತು. ಮತ್ತೊಂದೆಡೆ, ಕಾಂಗ್ರೆಸ್‌(ಒ) ಸಂಯುಕ್ತ ಸೋಷಿಯಲಿಸ್ಟ್‌ ಪಾರ್ಟಿ, ಪ್ರಜಾ ಸೋಷಿಯಲಿಸ್ಟ್‌ ಪಾರ್ಟಿ, ಸ್ವತಂತ್ರ ಪಾರ್ಟಿ, ಬಿಜೆಎಸ್‌ ಚುನಾವಣಾ ಪೂರ್ವ ಮೈತ್ರಿಯೊಂದಿಗೆ ಕಣಕ್ಕಿಳಿದರು ಇಂದಿರಾಳನ್ನು ಸೋಲಿಸಲು ಸಾಧ್ಯವಾಗಲಿಲ್ಲ. ಆದರೆ, 1975ರಲ್ಲಿ ಇಂದಿರಾ ಗಾಂಧಿ ವಿಧಿಸಿದ ತುರ್ತು ಪರಿಸ್ಥಿತಿ ಭಾರತೀಯ ರಾಜಕಾರಣದ ವರಸೆಯನ್ನು ಬದಲಿಸಿದವು. ತುರ್ತು ಪರಿಸ್ಥಿತಿ ಹಿಂದೆಗೆದ ನಂತರ ನಡೆದ ಚುನಾವಣೆಯಲ್ಲಿ ಅದ ಪ್ರಭಾವ ಎದ್ದು ಕಾಣಿತು. 
- ತಿಪ್ಪಾರ 

ಈ ಲೇಖನವು ವಿಜಯಕರ್ನಾಟಕದಲ್ಲಿ ಪ್ರಕಟವಾಗಿದೆ.